ಬೆಂಗಳೂರು: “ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ” ಎಂಬ ಘೋಷವಾಕ್ಯದಡಿ 108 ಆಂಬುಲೆನ್ಸ್ ಸೇವೆಯನ್ನು ಸರ್ಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಆರೋಗ್ಯ ಇಲಾಖೆ ಈ ಕ್ರಮ ಜಾರಿಗೆ ತಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 108 ಆರೋಗ್ಯ ಕವಚ ಆಂಬುಲೆನ್ಸ್ ಕಮಾಂಡ್ ಕಂಟ್ರೋಲ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರೋತ್ಸಾಹದಿಂದ ಯೋಜನೆ ಕಾರ್ಯರೂಪಕ್ಕೆ ಬಂದಿದೆ ಎಂದರು.
2008ರಲ್ಲಿ ಆರಂಭವಾದ 108 ಆಂಬುಲೆನ್ಸ್ ಸೇವೆಯನ್ನು ಇಷ್ಟು ದಿನ ಖಾಸಗಿ ಸಂಸ್ಥೆ ನಿರ್ವಹಿಸುತ್ತಿತ್ತು. ಇದೀಗ 2025-26ರ ಬಜೆಟ್ ಘೋಷಣೆಯಂತೆ ಸರ್ಕಾರವೇ ಸೇವೆ ನಡೆಸಲು ತೀರ್ಮಾನಿಸಿದೆ. ಸಿಂಗಪೂರ್ ಮಾದರಿ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಅಧ್ಯಯನ ಮಾಡಿ, ಚಾಮರಾಜನಗರದಲ್ಲಿ ಪ್ರಾಯೋಗಿಕ ಅನುಷ್ಠಾನ ನಡೆಸಿದ ಬಳಿಕ ಈ ಯೋಜನೆ ವಿಸ್ತರಿಸಲಾಗಿದೆ.
ಸರ್ಕಾರಿ ಸ್ವಾಮ್ಯದ C-DAC ಸಂಸ್ಥೆ ಸಾಫ್ಟ್ವೇರ್ ಅಭಿವೃದ್ಧಿಪಡಿಸಿದ್ದು, 24/7 ಕಮಾಂಡ್ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತಿದೆ. ಹೊಸ ವ್ಯವಸ್ಥೆಯಲ್ಲಿ ಆಂಬುಲೆನ್ಸ್ ಟ್ರಾಕಿಂಗ್, ವೈದ್ಯರೊಂದಿಗೆ ತುರ್ತು ಸಂಪರ್ಕ, ಆಸ್ಪತ್ರೆಗಳಿಗೆ ಮುನ್ನೆಚ್ಚರಿಕೆ ಮಾಹಿತಿ ಹಾಗೂ ರೋಗಿಗೆ ಸೂಕ್ತ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಇಂಧನ ಬಳಕೆ ಮೇಲ್ವಿಚಾರಣೆಗೆ ಫ್ಯೂಯಲ್ ಗೇಜ್ ವ್ಯವಸ್ಥೆಯೂ ಅಳವಡಿಸಲಾಗಿದೆ.
ರಾಜ್ಯದ ಎಲ್ಲಾ ಆಂಬುಲೆನ್ಸ್ ಸೇವೆಗಳು ಕೇಂದ್ರೀಕೃತ ವ್ಯವಸ್ಥೆಯಡಿ ಕಾರ್ಯನಿರ್ವಹಿಸಲಿದ್ದು, ಟೆಲಿ-ಮನಸ್, ಇ-ಸಂಜೀವಿನಿ ಮತ್ತು ಮಹಿಳಾ-ಮಕ್ಕಳ ಸಹಾಯವಾಣಿಯನ್ನೂ ಇದರೊಂದಿಗೆ ಜೋಡಿಸಲಾಗಿದೆ. ಇದು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆಯಾಗಿ ಪರಿಗಣಿಸಲಾಗಿದೆ.
ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಸುರೇಶ್ ಕುಮಾರ್, ಪ್ರಿಯಾಕೃಷ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ, ಡಿಜಿಟಲ್ ಹೆಲ್ತ್ ಸೊಸೈಟಿ ನಿರ್ದೇಶಕ ವಿಪಿನ್ ಸಿಂಗ್, ಆರೋಗ್ಯ ಇಲಾಖೆ ನಿರ್ದೇಶಕಿ ಡಾ. ರಜನಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



