ಮೈಸೂರು : ಜಿಲ್ಲೆಯ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ತಮಿಳುನಾಡು ಮೂಲದ ಮರ್ಕೆಂಟೈಲ್ ಬ್ಯಾಂಕ್ನಲ್ಲಿ ನಕಲಿ ಚಿನ್ನಾಭರಣಗಳನ್ನು ಗಿರವಿ ಇಟ್ಟು 56.78 ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್ ಸಿಬ್ಬಂದಿ ಸುರೇಶ್ ಕಣ್ಣನ್ ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಏಳು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರಿನ ಅಬ್ದುಲ್ ಜಲೀಲ್, ಮಂಡ್ಯದ ಸಾಗರ್, ಪುಟ್ಟರಾಜು, ರವಿಕುಮಾರ್, ಆತನ ಪತ್ನಿ ದಿವ್ಯ, ಬೆಂಗಳೂರಿನ ನಾಗರತ್ನ ರೆಡ್ಡಿ ಹಾಗೂ ಟಿ.ನರಸೀಪುರದ ರವೀಂದ್ರ ಕುಮಾರ್ ಆರೋಪಿಗಳಾಗಿದ್ದಾರೆ.
ರವೀಂದ್ರ ಕುಮಾರ್ ಬ್ಯಾಂಕ್ನ ಚಿನ್ನಾಭರಣ ಮೌಲ್ಯಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ವಂಚಕರೊಂದಿಗೆ ಶಾಮೀಲಾಗಿ ನಕಲಿ ಚಿನ್ನಾಭರಣಗಳನ್ನು ಮೌಲ್ಯಮಾಪನ ಮಾಡಿದ್ದಾರೆ ಎನ್ನಲಾಗಿದೆ. ಆರೋಪಿಗಳು ವಿವಿಧ ಹೆಸರುಗಳಲ್ಲಿ ಒಟ್ಟು 782 ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸಾಲ ಪಡೆದಿದ್ದರು. 2026ರ ಜನವರಿ 26ರಂದು ಮರುಮೌಲ್ಯಮಾಪನ ವೇಳೆ ವಂಚನೆ ಪತ್ತೆಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



