ಮೈಸೂರು : ‘ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ)ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ತಿಳಿಸಿದರು.
ಈ ಕುರಿತು ಇಲ್ಲಿನ ಎಸ್.ಎಂ.ಟಿ. ಆಸ್ಪತ್ರೆಯಲ್ಲಿ ಜಿಲ್ಲಾ ಮಟ್ಟದ ಎಚ್ಪಿವಿ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ಗೆ ಕಾರಣವಾಗುತ್ತದೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ಕ್ಯಾನ್ಸರ್ ಸೇರಿದಂತೆ ಇತರ ಗಂಭೀರ ಕಾಯಿಲೆಗಳು ಬರದಂತೆ ತಡೆಯಬಹುದು ಎಂದರು.
ಮುಂದುವರೆದು, ಅಭಿಯಾನದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು. ಲಸಿಕೆ ಪಡೆದ ಮಕ್ಕಳಿಗೆ ಪ್ರಮಾಣಪತ್ರವನ್ನು ನೀಡಲಾಗುವುದು ಎಂದು ವಿವರಿಸಿದರು.
ಇನ್ನೂ ಫಲಾನುಭವಿಗಳು ಗುರುತಿನ ಚೀಟಿಯೊಂದಿಗೆ ಮೊಬೈಲ್ ಫೋನ್ ಸಂಖ್ಯೆ, ಆಧಾರ್ ಕಾರ್ಡ್ ಜತೆಗೆ ಆಸ್ಪತ್ರೆಗೆ ಬಂದು ಲಸಿಕೆ ಪಡೆಯಬಹುದು. ಹೆಣ್ಣು ಮಕ್ಕಳ ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲ ಪೋಷಕರು ಸಹಕರಿಸಬೇಕು ಎಂದರು.
ಪ್ರಸ್ತುತ ಈ ಲಸಿಕೆಯನ್ನು14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಒಳಗಿನ ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ನೀಡಲಾಗುವುದು. ಲಸಿಕಾಕರಣವನ್ನು ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಮಾರ್ಗಸೂಚಿ ಅನುಸಾರ ಆಯೋಜನೆ ಮಾಡಲಾಗುತ್ತಿದೆ. ಲಸಿಕೆ ಪಡೆದವರ ಹೆಸರನ್ನು ‘ಯೂ-ವಿನ್’ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗುದು’ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಮಹಮ್ಮದ್ ಸಿರಾಜ್ ಅಹಮ್ಮದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅರುಣಕುಮಾರ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅನುರಾಧಾ ಹಾಜರಿದ್ದರು.



