ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ಶಾಸನಸಭೆ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಸಚಿವರು ಸದನಕ್ಕೆ ಗೈರುಹಾಜರಾಗುತ್ತಿರುವುದು ಹಾಗೂ ಶಾಸಕರ ಅಹವಾಲುಗಳಿಗೆ ಸಮರ್ಪಕವಾಗಿ ಸ್ಪಂದಿಸದಿರುವುದನ್ನು ಹಲವು ಸದಸ್ಯರು ತೀವ್ರವಾಗಿ ಟೀಕಿಸಿದರು.
ಅನಿವಾರ್ಯ ಕಾರಣಗಳ ಹೊರತಾಗಿ ಸಚಿವರು ಕಡ್ಡಾಯವಾಗಿ ಸದನದಲ್ಲಿ ಹಾಜರಿರಬೇಕೆಂದು ಮುಖ್ಯಮಂತ್ರಿ ಸೂಚಿಸಿದ್ದರೂ ಕೆಲವರು ಅದನ್ನು ಪಾಲಿಸುತ್ತಿಲ್ಲ ಎಂದು ಶಾಸಕರು ದೂರಿದರು. ಇದೇ ರೀತಿ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂಬ ಅಸಮಾಧಾನವನ್ನೂ ಅವರು ವ್ಯಕ್ತಪಡಿಸಿದರು.
ಕೆಲ ಹಿರಿಯ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಷಮತೆಯ ಮೌಲ್ಯಮಾಪನ ಮಾಡಬೇಕು ಎಂದು ಒತ್ತಾಯಿಸಿದರು. ಸದನಕ್ಕೆ ನಿರಂತರವಾಗಿ ಗೈರುಹಾಜರಾಗುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಎಸ್ಟಿ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಹಾಗೂ ಗ್ಯಾಸ್ ಬೆಲೆ ಏರಿಕೆ ವಿಚಾರದಲ್ಲಿ ಬಿಜೆಪಿಯನ್ನು ಸದನದಲ್ಲಿ ಪ್ರಶ್ನಿಸಲು ಶಾಸಕರಿಗೆ ಸೂಚಿಸಿದರು.



