ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹಗರಣ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕಟುಂಬ ಸದಸ್ಯರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಅಂಗೀಕರಿಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅಧಿಕಾರ ದುರುಪಯೋಗ ಆರೋಪ ಎದುರಿಸುತ್ತಿದ್ದ ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬದವರಿಗೆ ‘B’ ರಿಪೋರ್ಟ್ (ಕ್ಲೋಸರ್ ರಿಪೋರ್ಟ್) ಅಂಗೀಕರಿಸಿರುವುದು ತನಿಖಾ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ನಿಷ್ಪಕ್ಷಪಾತತೆಯ ಮೇಲೆ ಸಾರ್ವಜನಿಕ ವಿಶ್ವಾಸ ಕುಂದಿಸುತ್ತದೆ ಎಂದು ಆರೋಪಿಸಿದ್ದಾರೆ.
ಇನ್ನೂ ಈ ಮೊದಲು ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸ್ ಸಲ್ಲಿಸಿದ್ದ ‘B’ ರಿಪೋರ್ಟ್ ಅನ್ನು ಅಂಗೀಕರಿಸಿ, ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ, ಮಲ್ಲಿಕಾರ್ಜುನಸ್ವಾಮಿ ಹಾಗೂ ಮತ್ತೊಬ್ಬರಿಗೆ ಕ್ಲೀನ್ ಚಿಟ್ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರರ ವಿರುದ್ಧ ತನಿಖೆ ಮುಂದುವರಿಯುತ್ತಿರುವ ಸಂದರ್ಭದಲ್ಲಿ ಕೆಲವರಿಗೆ ಮಾತ್ರ ಮುಂಚಿತವಾಗಿ ಕ್ಲೀನ್ ಚಿಟ್ ನೀಡಿರುವುದು ತಪ್ಪು ಸಂದೇಶ ರವಾನಿಸುತ್ತದೆ ಎಂದು ವಾದಿಸಿದ್ದು, ಇದರಿಂದ ದೂರುದಾರರಿಗೆ ಅನ್ಯಾಯವಾಗಿದ್ದು, ಪ್ರಕರಣದ ಸಮಗ್ರ ತನಿಖೆಗೆ ಅಡ್ಡಿಯಾಗುತ್ತದೆ ಎಂದು ಹೇಳಿದ್ದಾರೆ.
ಅಲ್ಲದೆ, ಜನವರಿ 28, 2026ರಂದು ವಿಶೇಷ ನ್ಯಾಯಾಲಯ ನೀಡಿದ ಆದೇಶವನ್ನು ರದ್ದುಗೊಳಿಸುವಂತೆ ಹಾಗೂ ಪ್ರಕರಣದ ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ವರ್ಗಾಯಿಸಿ, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಮರು ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.



