ಬೆಂಗಳೂರು: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL) ಇತ್ತೀಚಿನ ವರ್ಷಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸುತ್ತಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಸಂಸ್ಥೆಯು ತನ್ನ ವ್ಯಾಪಾರ ವಹಿವಾಟನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ
ಈ ಸಂಸ್ಥೆಯು ತನ್ನ ಹಳೆಯ ಪದ್ಧತಿಗಳಿಂದ ಹೊರಬಂದು ಆಧುನಿಕ ಮಾರುಕಟ್ಟೆಗೆ ಪೈಪೋಟಿ ನೀಡಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ಸುಮಾರು 60ಕ್ಕೂ ಹೆಚ್ಚು ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದ್ದು, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆ.ಎಸ್.ಡಿ.ಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ ಸುಮಾರು 416 ಕೋಟಿ ರೂಪಾಯಿಗಳ ನಿವ್ವಳ ಲಾಭವನ್ನು ಗಳಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದೆ.
ಮೈಸೂರು ಸ್ಯಾಂಡಲ್ ಸೋಪಿನ ಘನತೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ. 2030ರ ವೇಳೆಗೆ ಸಂಸ್ಥೆಯ ಒಟ್ಟು ವಹಿವಾಟನ್ನು 5,000 ಕೋಟಿ ರೂಪಾಯಿಗಳಿಗೆ ಹೆಚ್ಚಿಸುವ ಗುರಿಯನ್ನು ಸಚಿವ ಎಂ.ಬಿ. ಪಾಟೀಲ್ ಹಾಕಿಕೊಂಡಿದ್ದು, ಆ ಮೂಲಕ ಕೆ.ಎಸ್.ಡಿ.ಎಲ್ ಅನ್ನು ಜಾಗತಿಕ ಮಟ್ಟದ ಎಫ್ಎಂಸಿಜಿ ಕಂಪನಿಯನ್ನಾಗಿ ರೂಪಿಸಲು ಸಕಲ ಸಿದ್ಧತೆ ನಡೆಸಲಾಗಿದೆ.



