ತಿರುವನಂತಪುರಂ : ಕೇರಳಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಬಹುಮತವನ್ನು ದಾಟಿ ಮುನ್ನುಗ್ಗುತ್ತಿದೆ. 96 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.
ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೂಚನೆ ಮೇರೆಗೆ, ಕೇರಳದ ಕ್ಯಾಲಿಕಟ್ಗೆ ಸಚಿವ ಜಮೀರ್ ಅಹ್ಮದ್ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪಕ್ಷದ ಮುಖಂಡರಿಂದ ಜಮೀರ್ಗೆ ಅದ್ದೂರಿ ಸ್ವಾಗತ ಸಿಕ್ಕಿದೆ.
ಏಪ್ರಿಲ್ 9 ರಂದು ಕೇರಳ ವಿಧಾನಸಭಾ ಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು, ಯುಡಿಎಫ್ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಎಲ್ಡಿಎಫ್ ಹಿನ್ನಡೆ ಅನುಭವಿಸಿದೆ. ಯುಡಿಎಫ್ 96, ಎಲ್ಡಿಎಫ್ 42, ಎನ್ಡಿಎ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ರಾಜ್ಯದಲ್ಲಿ 79.63% ಮತದಾನವಾಗಿತ್ತು. ರಾಜ್ಯದ 140 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 883 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಅವರ ಪೈಕಿ 40 ಮಹಿಳಾ ಸ್ಪರ್ಧಿಗಳು ಕಣದಲ್ಲಿದ್ದರು. ಸಿಪಿಐ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್), ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ (ಯುಡಿಎಫ್) ಮತ್ತು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಪ್ರಮುಖ ಪಕ್ಷಗಳು ಕಣದಲ್ಲಿದ್ದವು. ರಾಜ್ಯದಲ್ಲಿ ಬಹುಮತಕ್ಕೆ 71 ಸೀಟ್ ಬೇಕಿದ್ದವು.
ಕಳೆದ ಚುನಾವಣೆಯಲ್ಲಿ ಕೇರಳದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಾಗುವ 40 ವರ್ಷಗಳ ಸಂಪ್ರದಾಯವನ್ನು ಮುರಿದು ಎಡರಂಗ (LDF) ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿತ್ತು. ಎಲ್ಡಿಎಫ್ (LDF): 99, ಯುಡಿಎಫ್ (UDF): 41 ಗೆದ್ದಿದ್ದವು. ಎನ್ಡಿಎ (NDA): 0 (ಯಾವುದೇ ಸ್ಥಾನ ಗೆಲ್ಲಲಿಲ್ಲ).



