ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದ್ದರೂ ಅದನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್ಶಿಪ್ ಮಾಡಿಯೇ ಸಿದ್ದ ಎಂದು ಹೇಳಿದ್ದಾರೆ.
ಇದೇ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರೋಧದ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗಲೇ ಈ ಯೋಜನೆ ರೂಪಿಸಲಾಗಿತ್ತು. ಅದಕ್ಕೆ ವಿರೋಧವಿದ್ದರೆ ಆಗಲೇ ಭೂಮಿಯನ್ನು ಡಿನೋಟಿಫೈ ಮಾಡಬೇಕಿತ್ತು ಎಂದು ಪ್ರಶ್ನಿಸಿದರು.
ಇನ್ನು ರೈತರ ಮನವೊಲಿಕೆಗೆ ತಾನೇ ಖುದ್ದಾಗಿ ಹೋಗುವುದಾಗಿ ತಿಳಿಸಿದ ಅವರು, ಸಮಯ ಮತ್ತು ದಿನಾಂಕ ನಿಗದಿ ಮಾಡಿ ರೈತರ ಮುಂದೆ ಹೋಗುತ್ತೇನೆ. ಅವರ ಭಾವನೆಗಳನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ಮುಂದಿನ 20 ವರ್ಷಗಳಲ್ಲಿ ಬಿಡದಿ ಮತ್ತು ಬೆಂಗಳೂರು ದಕ್ಷಿಣ ಭಾಗದ ಅಭಿವೃದ್ಧಿಗೆ ಈ ಯೋಜನೆ ಮಹತ್ವದ್ದಾಗಲಿದ್ದು, ರೈತರ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡೇ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಸರ್ಕಾರದ ‘ಭೂಮಿ ಗ್ಯಾರಂಟಿ’ ಯೋಜನೆ ಕುರಿತು ಮಾತನಾಡಿದ ಡಿಸಿಎಂ, ಜನರು ಸಂಪಾದಿಸಿರುವ ಆಸ್ತಿಗಳಿಗೆ ಸರಿಯಾದ ದಾಖಲೆ ಒದಗಿಸುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗಿದೆ ಎಂದರಲ್ಲದೆ, ಇ-ಖಾತೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದ್ದು, ‘ಬಿ’ ಖಾತೆಗಳನ್ನು ‘ಎ’ ಖಾತೆಗೆ ಪರಿವರ್ತಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.



