ತುಮಕೂರು: ರಾಜ್ಯ ಸರ್ಕಾರಕ್ಕೆ ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆ ತುಮಕೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಿದ್ದ “ಮೂರು ವರ್ಷಗಳ ಸಾಧನಾ ಸಮರ್ಪಣಾ” ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು ವಿವರಿಸಿದರು.
ಚುನಾವಣೆಯ ವೇಳೆ ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಿದ್ಧಗೊಂಡಿದ್ದ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ 580 ಭರವಸೆಗಳಲ್ಲಿ ಈಗಾಗಲೇ 290ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಅವರು ಹೇಳಿದರು. ಉಳಿದ ಎರಡು ವರ್ಷಗಳಲ್ಲಿ ಬಾಕಿ ಉಳಿದ ಭರವಸೆಗಳನ್ನೂ ಈಡೇರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ “ನವ ಕರ್ನಾಟಕ” ಅಭಿವೃದ್ಧಿ ಮಾದರಿಯ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ, ತುಮಕೂರು ಜಿಲ್ಲೆಯಲ್ಲಿ 682 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಕ್ಕಾಗಿ ಗೃಹ ಸಚಿವ G. ಜಿ. ಪರಮೇಶ್ವರ್ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಹಂತ ಹಂತವಾಗಿ ಜಾರಿಗೆ ತಂದಿದ್ದೇವೆ. ಸರ್ವ ಜಾತಿ, ಸರ್ವ ಧರ್ಮದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇವೆ. ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದವರ ಬದುಕಿಗೆ ಶಕ್ತಿ ತುಂಬುವ ಕಾರ್ಯ ಸರ್ಕಾರದಿಂದ ನಡೆದಿದೆ ಎಂದು ಹೇಳಿದರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ರಾಜಕಾರಣವನ್ನು ಕಾಂಗ್ರೆಸ್ ಮಾಡಿಲ್ಲ ಎಂದು ಹೇಳಿದರು.
“ಕರ್ನಾಟಕ ಮಾದರಿ ಅಭಿವೃದ್ಧಿಯ ಮುಂದೆ ಗುಜರಾತ್ ಮಾದರಿ ಟೊಳ್ಳು” ಎಂದು ಟೀಕಿಸಿದ ಮುಖ್ಯಮಂತ್ರಿ, ಗುಜರಾತ್ನಲ್ಲಿ ಬಿಜೆಪಿ ದೀರ್ಘಕಾಲ ಆಡಳಿತ ನಡೆಸಿದರೂ ಸಮಾನ ಅಭಿವೃದ್ಧಿ ಕಂಡಿಲ್ಲ ಎಂದು ಆರೋಪಿಸಿದರು. ಬಡ ಕುಟುಂಬಗಳ ಸಂಕಷ್ಟದ ಉದಾಹರಣೆ ನೀಡಿ, ಸಾಮಾನ್ಯ ಜನರ ಬದುಕು ಇನ್ನೂ ದುಸ್ಥಿತಿಯಲ್ಲಿದೆ ಎಂದು ಹೇಳಿದರು.
ಪ್ರಧಾನಿ ಮೋದಿ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ಮತ್ತು ಚಿನ್ನದ ಬೆಲೆ ಗಗನಕ್ಕೇರಿದೆ ಎಂದು ಆರೋಪಿಸಿದರು. ಮೋದಿ ಆಡಳಿತದಲ್ಲಿ ಅಂಬಾನಿ ಮತ್ತು ಅದಾನಿ ಮುಂತಾದ ಉದ್ಯಮಿಗಳು ಮಾತ್ರ ಲಾಭ ಪಡೆದಿದ್ದಾರೆ ಎಂದರು. ಬಡವರು ಹಾಗೂ ಮಧ್ಯಮ ವರ್ಗದವರ ಆದಾಯ ಕುಸಿದಿದೆ ಎಂದು ಹೇಳಿದರು.
ರಾಜ್ಯದ ಆರ್ಥಿಕ ಸಾಧನೆಗಳ ಕುರಿತು ಮಾತನಾಡಿದ ಅವರು, ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು. ದೇಶದ ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರವಾಗಿದೆ. “ನುಡಿದಂತೆ ನಡೆದ ಸರ್ಕಾರ” ಎಂಬ ಹೆಗ್ಗಳಿಕೆಯನ್ನು ಕಾಂಗ್ರೆಸ್ ಸರ್ಕಾರ ಗಳಿಸಿದೆ ಎಂದು ಹೇಳಿದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೀಟ್ ಪರೀಕ್ಷೆ ಕುರಿತು ಮಾತನಾಡಿದ ಮುಖ್ಯಮಂತ್ರಿ, ಪರೀಕ್ಷಾ ವ್ಯವಸ್ಥೆಯ ಅವ್ಯವಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಎಂದು ಆರೋಪಿಸಿದರು. ರಾಜ್ಯದ CET ಮಾದರಿಯ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೊಳಿಸುವ ಸಲಹೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದರು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಕೂಡ ಈಡೇರಿಲ್ಲ ಎಂದು ಟೀಕಿಸಿದ ಅವರು, ಬಿಜೆಪಿ ಮತ್ತು ಆರ್ಎಸ್ಎಸ್ ಸರ್ಕಾರ ದೇಶದ ಸಾಲವನ್ನು ಹೆಚ್ಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



