ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ಬೆಳಗ್ಗೆ ಅಂಗೀಕರಿಸಿದ್ದಾರೆ. ಇದರೊಂದಿಗೆ ರಾಜ್ಯ ಸಚಿವ ಮಂಡಲವೂ ವಿಸರ್ಜನೆಯಾಗಿದೆ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಉನ್ನತ ನಾಯಕತ್ವ ಘೋಷಿಸಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸದ್ಯ ದೆಹಲಿಯಲ್ಲಿದ್ದು, ಪ್ರಮಾಣ ವಚನ ಸಮಾರಂಭ ಮತ್ತು ಸಚಿವ ಮಂಡಲ ರಚನೆ ಕುರಿತು ಪಕ್ಷದ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಸದ್ಯ ದೆಹಲಿಯಲ್ಲಿದ್ದು, ನೂತನ ಮುಖ್ಯಮಂತ್ರಿಯ ಪ್ರಮಾಣವಚನ, ಸಂಪುಟ ರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಿದ್ದಾರೆ. ಆದರೆ ಸೋಮವಾರ ಸಂಜೆ ಶುಭ ಸಮಯದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರಮಾಣ ವಚನ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೇವಾಲ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಸಮಾರಂಭವನ್ನು ವಿಧಾನಸೌಧದ ಮಹಾ ಮೆಟ್ಟಿಲುಗಳ ಬಳಿ ಅಥವಾ ಕಂಠೀರವ ಸ್ಟೇಡಿಯಂ ನಲ್ಲಿ ಆಯೋಜಿಸುವ ಸಾಧ್ಯತೆಗಳಿದ್ದು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಸೇರಿಸಿ ಭವ್ಯ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಯುತ್ತಿದೆ.
ರಾಜ್ಯಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆರಂಭಿಕ ಹಂತದಲ್ಲಿ ಸೀಮಿತ ಸಂಖ್ಯೆಯ ಸಚಿವರನ್ನಷ್ಟೇ ಸಚಿವ ಮಂಡಲಕ್ಕೆ ಸೇರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಬಳಿಕ ಉಳಿದ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಕಾಂಗ್ರೆಸ್ ಉನ್ನತ ನಾಯಕತ್ವ ಚಿಂತನೆ ನಡೆಸುತ್ತಿದೆ. ಸಂಪೂರ್ಣ ಸಚಿವ ಮಂಡಲ ರಚನೆಯಿಂದ ಅಸಮಾಧಾನ ಉಂಟಾಗುವ ಸಾಧ್ಯತೆ ಇರುವುದರಿಂದ ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.



