ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರಾನ್ನಲ್ಲಿರುವ ಭಾರತೀಯ ನಾಗರಿಕರು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಭಾರತ ಸರ್ಕಾರ ತುರ್ತು ಸಲಹೆ ನೀಡಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಕ್ಷಿಪಣಿ ಹಾಗೂ ವಾಯುದಾಳಿಗಳಿಂದ ಪ್ರಾದೇಶಿಕ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಈ ಸೂಚನೆ ನೀಡಲಾಗಿದೆ.
ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೊರಡಿಸಿರುವ ಹೊಸ ಪ್ರಯಾಣ ಸಲಹೆಯಲ್ಲಿ, ಭಾರತೀಯರು ಅನಗತ್ಯವಾಗಿ ಇರಾನ್ಗೆ ಪ್ರಯಾಣಿಸಬಾರದು ಎಂದು ಎಚ್ಚರಿಕೆ ನೀಡಿದೆ. ಈಗಾಗಲೇ ಇರಾನ್ನಲ್ಲಿ ನೆಲೆಸಿರುವವರು ಲಭ್ಯವಿರುವ ಸಾರಿಗೆ ವ್ಯವಸ್ಥೆಗಳನ್ನು ಬಳಸಿಕೊಂಡು ಆದಷ್ಟು ಬೇಗ ದೇಶ ತೊರೆಯುವಂತೆ ಸೂಚಿಸಲಾಗಿದೆ.
ವಿದ್ಯಾರ್ಥಿಗಳು, ಉದ್ಯಮಿಗಳು, ಯಾತ್ರಿಕರು ಹಾಗೂ ಪ್ರವಾಸಿಗರು ಸೇರಿದಂತೆ ಎಲ್ಲ ಭಾರತೀಯರಿಗೆ ಈ ಸಲಹೆ ಅನ್ವಯವಾಗುತ್ತದೆ. ಫೆಬ್ರವರಿಯಲ್ಲಿ ಸಂಘರ್ಷ ತೀವ್ರಗೊಂಡಾಗ ಸುಮಾರು 9,000 ಭಾರತೀಯರು ಇರಾನ್ನಲ್ಲಿ ಇದ್ದರು. ಅವರಲ್ಲಿ ಸುಮಾರು 1,800 ಮಂದಿ ಈಗಾಗಲೇ ಭಾರತಕ್ಕೆ ಮರಳಿದ್ದು, ಇನ್ನೂ 7,500ಕ್ಕೂ ಹೆಚ್ಚು ಮಂದಿ ಅಲ್ಲಿಯೇ ಉಳಿದಿದ್ದಾರೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಇಸ್ರೇಲ್ ಪ್ರತಿದಾಳಿ ನಡೆಸಿದ್ದು, ಹಲವು ನಗರಗಳಲ್ಲಿ ಸ್ಫೋಟಗಳ ವರದಿಯಾಗಿವೆ. ಈ ಬೆಳವಣಿಗೆಗಳು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿವೆ.



