ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ನ್ಯಾಯಾಲಯ ಸಂಕೀರ್ಣಗಳಿಗೆ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಘಟನೆ ನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದು, ಮಾಹಿತಿ ದೊರಕುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ (BDDS) ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ತೀವ್ರ ಪರಿಶೀಲನೆ ಆರಂಭಿಸಿದ್ದಾರೆ.
ಜಯನಗರದಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ಚಾಮರಾಜಪುರಂನ ಹಳೆಯ ಕೋರ್ಟ್ ಆವರಣದಲ್ಲಿ ಏಕಕಾಲಕ್ಕೆ ಹೈ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಸಿಪಿ ಕೆ.ಸಿ.ಪ್ರಕಾಶ್, ಇನ್ಸ್ಪೆಕ್ಟರ್ ಬಿ.ಎಸ್.ರವಿಶಂಕರ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದಾರೆ. BDDS ಮತ್ತು ಶ್ವಾನ ದಳದ ಸಿಬ್ಬಂದಿ ಕೂಡ ಕೋರ್ಟ್ ಕೊಠಡಿಗಳು, ಕಾರಿಡಾರ್ ಹಾಗೂ ವಾಹನ ನಿಲ್ದಾಣ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ಪೊಲೀಸರ ಪ್ರಾಥಮಿಕ ಶಂಕೆಯ ಪ್ರಕಾರ, ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಕಿಡಿಗೇಡಿಗಳು ಈ ಇ-ಮೇಲ್ ಕಳುಹಿಸಿರುವ ಸಾಧ್ಯತೆ ಇದ್ದು, ಇದು ಹುಸಿ ಬಾಂಬ್ ಬೆದರಿಕೆ ಎಂದು ಅಂದಾಜಿಸಲಾಗಿದೆ. ಮೈಸೂರಿನಲ್ಲಿ ನ್ಯಾಯಾಲಯಗಳಿಗೆ ಇಂತಹ ಇ-ಮೇಲ್ ಬೆದರಿಕೆಗಳು ಹಿಂದೆ ಕೂಡ ಬಂದಿದ್ದವು. ಕಳೆದ ವಾರವಷ್ಟೇ ಮೈಸೂರಿನ ಎರಡು ಪ್ರಮುಖ ಖಾಸಗಿ ಹೋಟೆಲ್ಗಳಿಗೆ ಇದೇ ರೀತಿಯ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಆಗಲೂ ತಪಾಸಣೆ ಬಳಿಕ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿತ್ತು.
ಇದೀಗ ನ್ಯಾಯಾಲಯಗಳನ್ನು ಗುರಿಯಾಗಿಸಿ ಮತ್ತೆ ಬಂದಿರುವ ಇ-ಮೇಲ್ ಹಿನ್ನೆಲೆ ಯಾರದ್ದು ಎಂಬುದನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೋರ್ಟ್ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ.



