ಬೆಂಗಳೂರು : ಬೇಬಿ ಕೇರ್ ಸೆಂಟರ್ನಲ್ಲಿ ಮಕ್ಕಳಿಗೆ ದೈಹಿಕ ಹಿಂಸೆ ನೀಡಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಗಂಭೀರ ಪ್ರಕರಣವಾಗಿದ್ದು ಈಗಾಗಲೇ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗ್ನೇಯ ವಿಭಾಗದ ಡಿಸಿಪಿ ಮೊಹಮದ್ ಸುಜೀತಾ ಅವರು ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಪೂರ್ವವಲಯದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಅವರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ಮುಂದುವರಿಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಸ್ಪಷ್ಟಪಡಿಸಿದರು.
ಇದೇ ವೇಳೆ ಮಕ್ಕಳ ಸುರಕ್ಷತೆಗಾಗಿ ಉದ್ಯೋಗಸ್ಥ ಪೋಷಕರು ತಮ್ಮ ಮಕ್ಕಳನ್ನು ಬೇಬಿ ಕೇರ್ ಸೆಂಟರ್ಗಳಿಗೆ ಕಳುಹಿಸುತ್ತಾರೆ. ಆದರೆ ಕೆಲ ಕೇಂದ್ರಗಳಲ್ಲಿ ಆಯಾಗಳು ಮಕ್ಕಳಿಗೆ ಹಿಂಸೆ ನೀಡಿರುವುದು ಅತ್ಯಂತ ವಿಷಾದನೀಯ ಎಂದು ಅವರು ಹೇಳಿದರು.
ಬ್ರೂಕ್ಫೀಲ್ಡ್ನಲ್ಲಿರುವ ಬೇಬಿ ಕೇರ್ ಸೆಂಟರ್ನಲ್ಲಿ ಮಕ್ಕಳು ಗಲಾಟೆ ಮಾಡಿದ ಕಾರಣಕ್ಕೆ ಅವರನ್ನು ಹಲ್ಲೆ ಮಾಡುವುದು, ನೀರು ಸುರಿದು ಭಯಪಡಿಸುವಂತಹ ಘಟನೆಗಳು ನಡೆದಿರುವುದು ಪೋಷಕರ ವಿಡಿಯೋಗಳಿಂದ ಬಹಿರಂಗವಾಗಿದೆ. ಈ ಕುರಿತು ಮಕ್ಕಳ ಸಹಾಯವಾಣಿಗೆ ದೂರು ಸಲ್ಲಿಸಲಾಗಿದ್ದು, ವಿಡಿಯೋ ಆಧಾರದ ಮೇಲೆ ಸಹಾಯವಾಣಿ ಪ್ರತಿನಿಧಿ ತಿಲಕೇಶ್ ಕುಮಾರ್ ಅವರು ಮಂಜುಳಾ, ವಿಜಯಲಕ್ಷ್ಮೀ, ಭವಾನಿ, ಬಿಂದು ಮತ್ತು ಸಿಂಧೂ ಎಂಬ ಸಿಬ್ಬಂದಿಗಳ ವಿರುದ್ಧ ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



