Tuesday, July 7, 2026
Google search engine

Homeರಾಜಕೀಯಎಚ್‌ಎಂ.ಟಿ. ಅರಣ್ಯ ಭೂಮಿ ಮಾರಾಟವೇ ಅಕ್ರಮ; ರಿಯಲ್ ಎಸ್ಟೇಟ್ ಆರೋಪಕ್ಕೆ ಅರ್ಥವಿಲ್ಲ: ಈಶ್ವರ ಖಂಡ್ರೆ ತಿರುಗೇಟು

ಎಚ್‌ಎಂ.ಟಿ. ಅರಣ್ಯ ಭೂಮಿ ಮಾರಾಟವೇ ಅಕ್ರಮ; ರಿಯಲ್ ಎಸ್ಟೇಟ್ ಆರೋಪಕ್ಕೆ ಅರ್ಥವಿಲ್ಲ: ಈಶ್ವರ ಖಂಡ್ರೆ ತಿರುಗೇಟು

ಬೀದರ್: ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ಭೂಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಅಕ್ರಮವಾಗಿ ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಮಾರಾಟ ಮಾಡಿರುವುದೇ ಮೂಲ ಸಮಸ್ಯೆಯಾಗಿದ್ದು, ಈಗ ಅರಣ್ಯ ಭೂಮಿ ತೆರವಿಗೆ ಆದೇಶವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಯಾವುದೇ ರೀತಿಯ ರಿಯಲ್ ಎಸ್ಟೇಟ್ ಚಟುವಟಿಕೆಗೆ ಅವಕಾಶವೇ ಇಲ್ಲ. ಹೀಗಿರುವಾಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಅರ್ಥವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿರುಗೇಟು ನೀಡಿದರು.

ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖೆ ಎಚ್.ಎಂ.ಟಿ. ಭೂಮಿಯನ್ನು ಅತಿಕ್ರಮಣ ಮಾಡಿದೆ ಎಂಬ ಕುಮಾರಸ್ವಾಮಿ ಆರೋಪವನ್ನು ತಳ್ಳಿ ಹಾಕಿದರು. ಭೂಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿರುವುದು ಎಚ್.ಎಂ.ಟಿ.ಯೇ ಹೊರತು ಅರಣ್ಯ ಇಲಾಖೆ ಅಲ್ಲ ಎಂದು ಸ್ಪಷ್ಟಪಡಿಸಿದರು. ಕರ್ನಾಟಕ ಅರಣ್ಯ ಕಾಯ್ದೆ-1963ರ ಸೆಕ್ಷನ್ 64ಎ ಅಡಿಯಲ್ಲಿ ಅರಣ್ಯ ಭೂಮಿಯನ್ನು ತೆರವುಗೊಳಿಸಿದ ಬಳಿಕ ಅಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವುದು ಸಾಧ್ಯವೇ ಇಲ್ಲ ಎಂದು ಪ್ರಶ್ನಿಸಿದರು.

ಕೆಲವರು ಅಧಿಕಾರಿಗಳು ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಉನ್ನತ ಮಟ್ಟದ ಸಮಿತಿ, ಅರಣ್ಯ ಸಚಿವ ಅಥವಾ ಸಚಿವ ಸಂಪುಟದ ಅನುಮತಿಯಿಲ್ಲದೆ ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿ, ಶೋಕಾಸ್ ನೋಟಿಸ್ ನೀಡಲಾಗಿದೆ. ಜೊತೆಗೆ ಆ ಅರ್ಜಿಯನ್ನು ಹಿಂಪಡೆಯಲು ಸಚಿವ ಸಂಪುಟದಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದರು.

1980ರ ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬಂದ ನಂತರ ಭೂಪರಿವರ್ತನೆ ಆಗದ ಯಾವುದೇ ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ತೀರ್ಪು ನೀಡಿದೆ. ಆದ್ದರಿಂದ ಈ ಭೂಮಿಯೂ ಅರಣ್ಯವಾಗಿಯೇ ಉಳಿಯುತ್ತದೆ ಎಂದು ಖಂಡ್ರೆ ಹೇಳಿದರು.

ಎಚ್.ಡಿ. ಕುಮಾರಸ್ವಾಮಿ, ಎಚ್.ಎಂ.ಟಿ. ಭೂಮಿಯಲ್ಲಿ ಅರಣ್ಯವೇ ಇಲ್ಲ, ಕೇವಲ ಕಟ್ಟಡಗಳಷ್ಟೇ ಇವೆ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ತಾವು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದಾಗ ಎಚ್.ಎಂ.ಟಿ. ಅಧಿಕಾರಿಗಳೇ ಪುಷ್ಪಗುಚ್ಛ ನೀಡಿ ಸ್ವಾಗತಿಸಿದ್ದರು ಎಂದು ನೆನಪಿಸಿದರು. ಈಗಲೂ ಅಲ್ಲಿನ ಸುಮಾರು 280 ಎಕರೆ ಪ್ರದೇಶದಲ್ಲಿ ದಟ್ಟವಾದ ಅರಣ್ಯ ಸ್ವರೂಪದ ನೆಡುತೋಪಿದ್ದು, ಪಾಳುಬಿದ್ದ ಕಟ್ಟಡಗಳಲ್ಲಿ ಸಿನಿಮಾ ಹಾಗೂ ಧಾರಾವಾಹಿಗಳ ಚಿತ್ರೀಕರಣ ನಡೆಯುತ್ತಿದೆ ಎಂದು ಹೇಳಿದರು.

ಅರಣ್ಯ ಭೂಮಿಯನ್ನು ಎಚ್.ಎಂ.ಟಿ. ವಾಣಿಜ್ಯ ಉದ್ದೇಶಕ್ಕೆ ಬಳಸಿದ್ದು, ಸುಮಾರು 165 ಎಕರೆ ಭೂಮಿಯನ್ನು ಕೇವಲ 300 ಕೋಟಿ ರೂಪಾಯಿಗೆ ಮಾರಾಟ ಮಾಡಿದೆ. ಈ ವಿಚಾರವನ್ನು ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿ ಎಂದು ಸವಾಲು ಹಾಕಿದರು.

ಎಚ್.ಎಂ.ಟಿ. ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ ಏಳು ಕೋಟಿ ಕನ್ನಡಿಗರ ಆಸ್ತಿಯಾಗಿದ್ದು, ಬೆಂಗಳೂರಿಗೆ ಅತ್ಯಗತ್ಯವಾದ ಹಸಿರು ಶ್ವಾಸಕೋಶವಾಗಿದೆ. ಲಾಲ್‌ಬಾಗ್ ಹಾಗೂ ಕಬ್ಬನ್ ಪಾರ್ಕ್‌ಗಿಂತಲೂ ದೊಡ್ಡದಾದ ಜೈವಿಕ ಉದ್ಯಾನ ನಿರ್ಮಿಸುವ ಗುರಿಯನ್ನು ಸರ್ಕಾರ ಬಹಿರಂಗವಾಗಿಯೇ ಘೋಷಿಸಿದೆ. ಇಂತಹ ಯೋಜನೆಯನ್ನು ರಿಯಲ್ ಎಸ್ಟೇಟ್ ದಂಧೆ ಎಂದು ಆರೋಪಿಸುವುದು ಸರಿಯಲ್ಲ ಎಂದರು.

ಇದೇ ವೇಳೆ, ರಾಜ್ಯದ ಅಭಿವೃದ್ಧಿ ಬಗ್ಗೆ ನಿಜವಾದ ಕಾಳಜಿ ಇದ್ದರೆ ಎಚ್.ಡಿ. ಕುಮಾರಸ್ವಾಮಿ ಮೊದಲು ಎನ್.ಎಂ.ಡಿ.ಸಿ. ಉಕ್ಕಿನ ಕಾರ್ಖಾನೆ ಹಾಗೂ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು. ಸಾವಿರಾರು ಎಕರೆ ಭೂಮಿ ಪಡೆದಿದ್ದರೂ 12 ವರ್ಷಗಳಿಂದ ಎನ್.ಎಂ.ಡಿ.ಸಿ. ಕಾರ್ಖಾನೆ ಆರಂಭವಾಗಿಲ್ಲ ಎಂದು ಟೀಕಿಸಿದರು.

ಬೆಂಗಳೂರು ಅರಣ್ಯ ಭೂಮಿಯ ಮೌಲ್ಯ ಸುಮಾರು 14 ಸಾವಿರ ಕೋಟಿ ರೂಪಾಯಿ ಎಂದು ಎಚ್.ಎಂ.ಟಿ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲೇ ಉಲ್ಲೇಖವಾಗಿದೆ. ಈ ಬೆಲೆಬಾಳುವ ಭೂಮಿಯ ಮೇಲೆ ಕಣ್ಣಿಟ್ಟವರು ಯಾರು ಎಂಬುದನ್ನು ಜನರೇ ನಿರ್ಧರಿಸಲಿ ಎಂದು ಹೇಳಿದರು.

ತಾವು ಅರಣ್ಯ ಸಚಿವರಾಗಿದ್ದಾಗ ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಗಿಡ ನೆಡಿಸಿದ್ದೇನೆ. ಜೊತೆಗೆ ಹೆಸರುಘಟ್ಟ ಕೆರೆ ಸುತ್ತಮುತ್ತಲಿನ 5,678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿ ರಿಯಲ್ ಎಸ್ಟೇಟ್ ದಂಧೆಯಿಂದ ರಕ್ಷಿಸಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

RELATED ARTICLES
- Advertisment -
Google search engine

Most Popular