ಮೈಸೂರು : ಕಾಯಕ ಸಮಾಜಗಳ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅತ್ಯಂತ ಹಿಂದುಳಿದ ವರ್ಗದಿಂದ ಬಂದಿರುವ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿರುವುದನ್ನು ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಕೇವಲ ಜಾತಿಯ ಆಧಾರದ ಮೇಲೆ ಗುರಿಯಾಗಿಸಿಕೊಂಡು ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಹೇಳಿದ ವಿಜಯೇಂದ್ರ, ಕಾಂಗ್ರೆಸ್ನ ರಾಜಕೀಯ ಧೋರಣೆಯನ್ನು ಟೀಕಿಸಿದರು.
ಇನ್ನೂ ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಲ್ಪಸಂಖ್ಯಾತರ ಓಲೈಕೆಯ ಹೆಸರಿನಲ್ಲಿ ಬಹುಸಂಖ್ಯಾತರ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದರು. ಅಕ್ರಮವಾಗಿ ದೇಶ ಪ್ರವೇಶಿಸಿರುವ ಬಾಂಗ್ಲಾದೇಶದ ವಲಸಿಗರಿಗೆ ವಾಸದ ದೃಢೀಕರಣ ಪತ್ರಗಳನ್ನು ನೀಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಂವಿಧಾನ ಮತ್ತು ಸಾಮಾಜಿಕ ಸಮಾನತೆಯ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ಗೆ ಮಹಾತ್ಮ ಗಾಂಧಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಬಳಸುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು. ಇದೇ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಆಯೋಜಿಸುವ ಸರ್ಕಾರದ ಪ್ರಸ್ತಾಪವನ್ನೂ ವಿಜಯೇಂದ್ರ ವಿರೋಧಿಸಿದರು.
ಕಂಬಳಕ್ಕೆ ತನ್ನದೇ ಆದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವಿದ್ದು, ಅದನ್ನು ಕರಾವಳಿ ಜಿಲ್ಲೆಗಳಲ್ಲೇ ಇನ್ನಷ್ಟು ಅದ್ದೂರಿಯಾಗಿ ನಡೆಸಬೇಕು. ಮೈಸೂರಿನ ಐತಿಹಾಸಿಕ ದಸರಾ ಪರಂಪರೆಯೊಂದಿಗೆ ಅದನ್ನು ಜೋಡಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.
ಮೈಸೂರಿನ ಸಂಸ್ಕೃತಿ ಮತ್ತು ದಸರಾದ ಮೂಲ ಸ್ವರೂಪವನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಸಾರ್ವಜನಿಕರ ಭಾವನೆಗಳಿಗೆ ಗೌರವ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.



