ಬೆಂಗಳೂರು ದಕ್ಷಿಣ : ಬಿಡದಿ ಸ್ಮಾರ್ಟ್ ಟೌನ್ಶಿಪ್ ಯೋಜನೆ ವಿರೋಧಿಸಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಹೋಬಳಿಯ ಬೈರಮಂಗಲದಲ್ಲಿ ಜಂಟಿ ಮಾರುಕಟ್ಟೆ ಸಮಿತಿ (JMC) ಅಧಿಕಾರಿಗಳ ಸರ್ವೆ ಕಾರ್ಯವನ್ನು ತಡೆದು ರೈತರು ಹಾಗೂ ರೈತ ಮಹಿಳೆಯರು ಭಾರೀ ಪ್ರತಿಭಟನೆ ನಡೆಸಿದರು.
ಸರ್ವೆಗೆ ಆಗಮಿಸಿದ್ದ ಅಧಿಕಾರಿಗಳ ವಾಹನದ ಮೇಲೆ ಕೆಲ ಪ್ರತಿಭಟನಾಕಾರರು ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರೆ, ಮಹಿಳೆಯರು ಪೊರಕೆಗಳಿಂದ ವಾಹನಕ್ಕೆ ಹೊಡೆದು ತಮ್ಮ ಅಸಮಾಧಾನ ಹೊರಹಾಕಿದರು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಇನ್ನೂ ಪ್ರತಿಭಟನೆಯಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದು, ನಮ್ಮ ಜೀವ ಹೋದರೂ ತಲೆತಲಾಂತರದಿಂದ ಉಳಿಸಿಕೊಂಡಿರುವ ಕೃಷಿ ಭೂಮಿಯನ್ನು ಬಿಟ್ಟುಕೊಡುವುದಿಲ್ಲ. ಬಲವಂತವಾಗಿ ಸರ್ವೆ ನಡೆಸಲು ಬಂದರೆ ತೀವ್ರವಾಗಿ ಪ್ರತಿರೋಧಿಸುತ್ತೇವೆ ಎಂದು ಘೋಷಣೆ ಕೂಗಿದರು.
ಯೋಜನೆಯ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ ರೈತರು, ಬಿಡದಿ–ಹಾರೋಹಳ್ಳಿ ಮುಖ್ಯರಸ್ತೆಯಲ್ಲಿ ಧರಣಿ ನಡೆಸಿ ರಸ್ತೆ ತಡೆ ಮಾಡಿದರು. ಇದರ ಪರಿಣಾಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರತಿಭಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಂಡು, ರೈತರೊಂದಿಗೆ ಮಾತುಕತೆ ನಡೆಸಿದರು. ಆದರೆ ಯೋಜನೆ ಹಿಂಪಡೆಯುವವರೆಗೆ ಹೋರಾಟ ಮುಂದುವರಿಸುವುದಾಗಿ ರೈತರು ಸ್ಪಷ್ಟಪಡಿಸಿದರು.



