ಲಕ್ನೋ : ಅಯೋಧ್ಯೆ ರಾಮಮಂದಿರದ ದೇಣಿಗೆ ವಿಚಾರದಲ್ಲಿ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮಮಂದಿರ ಚಳವಳಿಯ ಸಂದರ್ಭದಲ್ಲಿ ರಾಮಭಕ್ತರ ವಿರುದ್ಧ ಕ್ರಮ ಕೈಗೊಂಡವರು ಇಂದು ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯೋಗಿ, ಅಯೋಧ್ಯೆ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಳ್ಳುವ ಮುನ್ನವೇ ಟ್ರಸ್ಟ್ ಹಾಗೂ ಅಯೋಧ್ಯೆಯ ಬಗ್ಗೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.
ರಾಮ ಜನ್ಮಭೂಮಿ ಚಳವಳಿಯ ಸಮಯದಲ್ಲಿ ಕರಸೇವಕರ ಮೇಲೆ ಲಾಠಿಚಾರ್ಜ್ ಹಾಗೂ ಗುಂಡಿನ ದಾಳಿ ನಡೆದ ಘಟನೆಗಳನ್ನು ಉಲ್ಲೇಖಿಸಿದ ಅವರು, ಆ ಸಮಯದಲ್ಲಿ ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದವರು ಈಗ ರಾಜಕೀಯ ಕಾರಣಗಳಿಗಾಗಿ ಧರ್ಮದ ವಿಚಾರದಲ್ಲಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಪಕ್ಷಗಳು ಭಾರತದ ಸಂಸ್ಕೃತಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿವೆ ಎಂದು ದೂರಿದ ಯೋಗಿ, ಅಯೋಧ್ಯೆ ರಾಮಮಂದಿರದ ದೇಣಿಗೆ ಕುರಿತ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ತಂಡ (SIT) ರಚಿಸಿದೆ. ಯಾರ ಬಳಿಯೇ ಆಗಲಿ ಸೂಕ್ತ ಸಾಕ್ಷ್ಯಾಧಾರಗಳಿದ್ದರೆ ಅದನ್ನು ತನಿಖಾ ತಂಡಕ್ಕೆ ಸಲ್ಲಿಸಬೇಕು. ತನಿಖೆಯಲ್ಲಿ ಯಾರೇ ತಪ್ಪಿತಸ್ಥರು ಎಂದು ಕಂಡುಬಂದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಇದೇ ವೇಳೆ ಯುಪಿಎ ಸರ್ಕಾರದ ಅವಧಿಯಲ್ಲಿ ರಾಮಸೇತು ವಿಚಾರವನ್ನು ಪ್ರಸ್ತಾಪಿಸಿದ ಯೋಗಿ, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದೆ ಸುಳ್ಳು ಆರೋಪಗಳನ್ನು ಮಾಡುತ್ತಿವೆ ಎಂದು ಆರೋಪಿಸಿದರು.



