ಧಾರವಾಡ: ಜಿಲ್ಲಾಡಳಿತದಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸೆ. 25 ಹಾಗೂ ನ. 06, 2023 ರಂದು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಜನತಾ ದರ್ಶನಗಳಲ್ಲಿ ಒಟ್ಟು 662 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಇವುಗಳಲ್ಲಿ 626 ಅರ್ಜಿಗಳನ್ನು ಪರಿಹರಿಸಿದ್ದು, ಉಳಿದ 36 ಅರ್ಜಿಗಳು ಲೋಕೋಪಯೋಗಿ ಇಲಾಖೆ, ಕಂದಾಯ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಶಿಕ್ಷಣ ಮತ್ತು ವಸತಿ ಇಲಾಖೆಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುತ್ತವೆ. ಈ ಕುರಿತು ಮುಂದಿನ ಎರಡು ದಿನಗಳಲ್ಲಿ ಕ್ರಮ ಜರುಗಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಜಿಲ್ಲಾಧಿಕಾರಿಗಳು ಈಗಾಗಲೇ ನಿರ್ದೇಶನ ನೀಡಿದ್ದಾರೆ.
ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರ ನೇತೃತ್ವದಲ್ಲಿ ಡಿ. 23 ಶನಿವಾರದಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲು, ಮನವಿ, ದೂರುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.