ಮೈಸೂರು: ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದಾಗಿ ಕಂಗೆಟ್ಟಿದ್ದ ಜನತೆಗೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೈ ಹಿಡಿದ ಕಾರಣ ರಾಜ್ಯದ ಮಹಿಳೆಯರು ನಿರಾಳವಾಗಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರ್ ನಾಥ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನ ಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಸ್ವತಃ ಪ್ರಧಾನ ಮಂತ್ರಿಗಳೇ ಇದನ್ನು ಅಪಹಾಸ್ಯ ಮಾಡುತ್ತಿದ್ದರು. ಬಳಿಕ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗ್ಯಾರೆಂಟಿ ಯೋಜನೆ ಅನುಷ್ಠಾನ ಮಾಡಿದ ಬಳಿಕ ಅವುಗಳ ಜನಪ್ರಿಯತೆ ಕಂಡು ಗ್ಯಾರೆಂಟಿಯಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಹೀಯಾಳಿಸುತ್ತಿದ್ದವರೇ ಇದೀಗ ಮೋದಿ ಗ್ಯಾರೆಂಟಿ ಎನ್ನುತ್ತಿದ್ದಾರೆ. ಆದರೇ, ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯೇ ಮೋದಿಯವರ ಗ್ಯಾರೆಂಟಿ ಎಂದು ವ್ಯಂಗ್ಯವಾಡಿದರು.
ಗ್ಯಾರಂಟಿ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ ೬ ಸಾವಿರ ರೂ. ಸಿಗುತ್ತಿದೆ. ಇದರಿಂದ ಬೆಲೆ ಏರಿಕೆ ಬಿಸಿ ಸ್ವಲ್ಪ ಕಡಿಮೆಯಾಗಿದೆ. ರೈತರ ಆದಾಯ ಡಬ್ಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪುಲ್ವಾಮ ಘಟನೆ ತಂದು ಭಾವನಾತ್ಮಕವಾಗಿ ಮತ ಪಡೆದಿರಿ. ಈಗ ರಾಮಮಂದಿರ ಕಟ್ಟಿದ್ದೇವೆ ಎಂದು ಅದರ ಮೂಲಕ ಮತ ಪಡೆಯಲು ಮುಂದಾಗಿದ್ದೀರಿ. ಇಷ್ಟಲ್ಲದೆ ನಿಮ್ಮ ಸಾಧನೆ ಏನು ಎಂದು ಜನರ ಮುಂದೆ ಇಡಿ ಎಂದು ಸವಾಲು ಹಾಕಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷೆ ಪುಷ್ಪವಲ್ಲಿ, ಮೈಸೂರು ಜಿಲ್ಲೆ ಮಹಿಳಾ ಘಟಕದ ಅಧ್ಯಕ್ಷೆ ಲತಾ ಸಿದ್ಧಶೆಟ್ಟಿ ಉಪಸ್ಥಿತರಿದ್ದರು.