ಬೆಂಗಳೂರು: ಉಭಯ ಸದನಗಳಲ್ಲೂ ಅಂಗೀಕಾರಗೊಂಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-೨೦೨೪’ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇನ್ಮುಂದೆ ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಶೇ.೬೦ರಷ್ಟು ಕನ್ನಡ ಭಾಷೆಯ ಬಳಕೆ ಕಡ್ಡಾಯವಾಗಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ-೨೦೨೪ ಅನ್ನು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ವಿಧಾನಸಭೆ, ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ದೊರೆತಿತ್ತು. ಈ ಮಸೂಧೆಯನ್ನು ಕಾಯ್ದೆಯಾಗಿಸುವ ನಿಟ್ಟಿನಲ್ಲಿ ರಾಜ್ಯಪಾಲರ ಅಂಕಿತಕ್ಕೆಕಳು ಹಿಸಲಾಗಿತ್ತು. ರಾಜ್ಯಪಾಲರ ಒಪ್ಪಿಗೆ ದೊರೆತಿದೆ. ಹೀಗಾಗಿ ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಕೃತವಾಗಿ ಆದೇಶ ಮಾಡಲಾಗಿದೆ.
ವಿಶೇಷ ರಾಜ್ಯ ಪತ್ರದಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.೬೦ರಷ್ಟು ಪ್ರದರ್ಶಿಸಬೇಕಾಗಿದೆ. ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಇರಬೇಕಾಗಿದೆ.