ಬಳ್ಳಾರಿ: ವೈದ್ಯಕೀಯ ಪದವಿ ಪೂರ್ಣಗೊಳಿಸಿದ ಪದವೀಧರರು ಸಮಾಜದಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡಬೇಕು ಎಂದು ತಮಿಳುನಾಡು ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಚಂದ್ರಮೋಹನ್. ಬಿ ಅವರು ಹೇಳಿದರು. ವಿಮ್ಸ್ ಸಭಾಂಗಣದಲ್ಲಿ ಗುರುವಾರ ನಡೆದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ 63ನೇ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವೈದ್ಯ ವೃತ್ತಿಯಲ್ಲಿ ತೊಡಗಿರುವವರು ವೈದ್ಯಕೀಯ ಕ್ಷೇತ್ರಕ್ಕೆ ಸೀಮಿತವಾಗದೆ, ಉತ್ಸಾಹದಿಂದ ಹೊರ ಜಗತ್ತನ್ನು ಅನ್ವೇಷಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವೈದ್ಯಕೀಯ ಪದವಿ ಪೂರ್ಣಗೊಳಿಸಿದವರು ನೀವು ಎಷ್ಟು ದೂರಕ್ಕೆ ಬಂದಿದ್ದೀರಿ ಎಂಬುದರ ಬಗ್ಗೆ ಹೆಮ್ಮೆ ಪಡಬೇಕು ಮತ್ತು ನೀವು ಎಷ್ಟು ಎತ್ತರಕ್ಕೆ ಬೆಳೆಯಬಹುದು ಎಂದು ನಂಬಬೇಕು ಮತ್ತು ಸಾಮಾನ್ಯ ಜನರಿಗೆ ಪ್ರಾಮಾಣಿಕ ಸೇವೆಯಿಂದ ತಮ್ಮ ಕರ್ತವ್ಯವನ್ನು ಆನಂದಿಸಬೇಕು. ವೈದ್ಯ ವಿದ್ಯಾರ್ಥಿಗಳು ಹೃದಯದಲ್ಲಿ ಧೈರ್ಯ, ಮನಸ್ಸಿನಲ್ಲಿ ವಿನಯ, ಬದಲಾವಣೆಯ ಅಚಲ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಹಾಗೂ ವಿಮ್ಸ್ ಆಡಳಿತ ಮಂಡಳಿ ಸದಸ್ಯ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ರೋಗಿಗಳೊಂದಿಗೆ ಉತ್ತಮವಾಗಿ ಸ್ಪಂದಿಸುವುದು ಹಾಗೂ ತಾಳ್ಮೆಯಿಂದ ವರ್ತಿಸುವುದು ವೈದ್ಯರ ಆದ್ಯತೆಯಾಗಿದ್ದು, ವೈದ್ಯರಲ್ಲಿ ಸಹಕಾರ-ಸಹಾಯ ಮನೋಭಾವನೆ ಇರಬೇಕು. ಇದರಿಂದ ಜಿಲ್ಲೆಯ ಜನತೆ ಹೆಮ್ಮೆ ಪಡಬೇಕು. ವಿಮ್ಸ್ ನ ನಿರ್ದೇಶಕ ಹಾಗೂ ಡೀನ್ ಆದ ಡಾ. ಟಿ.ಗಂಗಾಧರ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲಿಕೆಯೇ ಜೀವನ, ಅದಕ್ಕೆ ಕೊನೆಯಿಲ್ಲ, ಪ್ರಸ್ತುತ ಜ್ಞಾನಕ್ಕೆ ತಕ್ಕಂತೆ ವೈದ್ಯಕೀಯ ವಿದ್ಯಾರ್ಥಿಗಳು ಅಪ್ ಡೇಟ್ ಆಗಬೇಕು ಮತ್ತು ಅಭಿವೃದ್ಧಿ ಹೊಂದಬೇಕು. ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವೈದ್ಯಕೀಯ ಪದವಿ ಪಡೆದವರು ವಿಶ್ವಾದ್ಯಂತ ಮನ್ನಣೆ ಗಳಿಸಿದ್ದಾರೆ. ಪದವಿ ಪಡೆದ ವೈದ್ಯಕೀಯ ವಿದ್ಯಾರ್ಥಿಗಳು ತಾವೂ ಸಾಧನೆಯ ಮೈಲಿಗಲ್ಲು ತಲುಪಬೇಕು ಎಂದು ಹಾರೈಸಿದರು.
ಸಮಾರಂಭದಲ್ಲಿ 95 ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು 55 ಪದವಿ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ 150 ವೈದ್ಯಕೀಯ ವಿದ್ಯಾರ್ಥಿಗಳು ಪದವಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ವೈದ್ಯಕೀಯ ಮಂಡಳಿಯ ಸದಸ್ಯರಾದ ಡಾ. ವೈ.ಸಿ.ಡಾ.ಯೋಗಾನಂದ ರೆಡ್ಡಿ, ಪ್ರಭಾರಿ ವಿಮ್ಸ್ ಪ್ರಾಂಶುಪಾಲರು. ಮಲ್ಲಿಕಾರ್ಜುನ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಸುಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಆಸ್ಪತ್ರೆಯ ನಿರ್ದೇಶಕರು ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ. ಎನ್ ಸೇರಿದಂತೆ ವಿಮ್ಸ್ ಹಳೆ ವಿದ್ಯಾರ್ಥಿಗಳು, ನಿವೃತ್ತ ಪ್ರಾಂಶುಪಾಲರು, ವೈದ್ಯಕೀಯ ವಿದ್ಯಾರ್ಥಿಗಳು, ಪಾಲಕರು ಮತ್ತಿತರರು ಉಪಸ್ಥಿತರಿದ್ದರು.