Tuesday, February 17, 2026
Google search engine

Homeಅಪರಾಧಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾ ದಾಳಿ: ಇಬ್ಬರು ಪಟ್ಟಣ ಪಂಚಾಯಿತಿ ಅಧಿಕಾರಿಗಳ ಬಂಧನ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾ ದಾಳಿ: ಇಬ್ಬರು ಪಟ್ಟಣ ಪಂಚಾಯಿತಿ ಅಧಿಕಾರಿಗಳ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ಪಿಡಬ್ಲ್ಯುಡಿ ಕ್ಲಾಸ್-1 ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ ಮತ್ತು ಜೂನಿಯರ್ ಇಂಜಿನಿಯರ್ ನಾಗರಾಜ್ ಎಂದು ಗುರುತಿಸಲಾಗಿದೆ.

2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್. ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಗುತ್ತಿಗೆದಾರರು 9,77,154 ರೂ.ಮೊತ್ತದ ಬಿಲ್ಲು ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ವಿಚಾರಿಸಿದರು ಎನ್ನಲಾಗಿದೆ. ಈ ವೇಳೆ ಬಿಲ್ಲು ಪಾಸ್ ಮಾಡಲು ತನಗೆ 37,000 ರೂ. ಮತ್ತು ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿಗೆ 15,000 ರೂ. ಲಂಚ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು.

ಜೂನಿಯರ್ ಇಂಜಿನಿಯರ್ ನಾಗರಾಜು ಮುಂಚಿತವಾಗಿ 7,000 ರೂ. ಪಡೆದುಕೊಂಡಿದ್ದ. ಗುರುವಾರ ಬಾಕಿ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ. ನಟರಾಜರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್, ನಿರೀಕ್ಷಕರಾದ ಅಮಾನುಲ್ಲಾ ಎ., ಸುರೇಶ್ ಕುಮಾರ್ ಪಿ., ಚಂದ್ರಶೇಖರ್ ಕೆ.ಎನ್., ಚಂದ್ರಶೇಖರ್ ಸಿ.ಎಲ್. ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular