ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಕ್ಕೆ ತೆರೆ ಬೀಳುತ್ತಿದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಗರದ ೧೦ ಪ್ರಮುಖ ದೇವಾಲಯಗಳಿಂದ ಸಿದ್ಧಗೊಳ್ಳುತ್ತಿರುವ ದಶಮಂಟಪಗಳ ಪ್ರದರ್ಶನಕ್ಕಾಗಿ ಸಾವಿರಾರು ಮಂದಿ ಮಂಜಿನ ನಗರಿ ಮಡಿಕೇರಿಯತ್ತ ಆಗಮಿಸುತ್ತಿದ್ದಾರೆ.
ಇಂದು ರಾತ್ರಿ ೧೧ ಗಂಟೆ ನಂತರ ಆರಂಭಗೊಳ್ಳುವ ದಶಮಂಟಪಗಳ ಪ್ರದರ್ಶನ ಮುಂಜಾನೆಯವರೆಗೂ ಸಂಚರಿಸಿ ಪ್ರದರ್ಶನ ನೀಡಲಿವೆ. ಲಕ್ಷಾಂತರ ರೂ. ಖರ್ಚು ಮಾಡಿ ದಶಮಂಟಪಗಳನ್ನು ಸಿದ್ಧಗೊಳಿಸುವ ಕಾರ್ಯ ಈಗಾಗಲೇ ಅಂತಿಮ ತಯಾರಿ ಕಾರ್ಯಗಳು ನಡೆಯುತ್ತಿದೆ. ಹಗಲಿನಲ್ಲಿ ಮೈಸೂರು ದಸರಾ ರಾತ್ರಿ ಮಡಿಕೇರಿ ದಸರಾ ಎಂದೇ ಪ್ರಸಿದ್ಧಗೊಂಡಿರುವ ಮಂಜಿನ ನಗರಿ ಮಡಿಕೇರಿಯಲ್ಲಿ ರಾತ್ರಿ ವರ್ಣರಂಜಿತ ದಶಮಂಟಪ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಜನರು ರಾತ್ರಿಯ ಅದ್ಭುತ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಪೌರಾಣಿಕ ಹಿನ್ನೆಲೆಯ ಕತೆಯನ್ನು ಪ್ರದರ್ಶಿಸಲು ನಾಲ್ಕು ಶಕ್ತಿದೇವತೆಗಳ ದೇವಾಲಯ ಸಮಿತಿಗಳು ಸೇರಿದಂತೆ ೧೦ ದೇವಾಲಯಗಳೂ ಕೂಡ ಒಂದೊಂದು ಕಥೆಯನ್ನು ಆಯ್ಕೆಮಾಡಿಕೊಂಡು ಪ್ರದರ್ಶನ ನೀಡಲು ಸಿದ್ಧವಾಗಿದ್ದು, ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಲಕ್ಷಾಂತರ ಜನರು ದಶಮಂಟಪ ಪ್ರದರ್ಶನ ವೀಕ್ಷಣೆಗೆ ಕಾಯುತ್ತಿದ್ದಾರೆ.