ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಖಂಡಿಸಿ ಬಿಜೆಪಿಯು ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ಮುಂದಾಗಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಹಿಟ್ಲರ್ ಆಡಳಿತದ ಪದ್ದತಿ, ಮೊಘಲರ ಆಡಳಿತದ ಪದ್ದತಿಯನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ.
ಇ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ. ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ ನೀತಿಗಳನ್ನು ಪಾಲಿಸುತ್ತೇವೆ ಅಂತಾ ಹೇಳುವ ಕಾಂಗ್ರೆಸ್ ಸರ್ಕಾರದ ನಡೆ ಹಿಟ್ಲರ್ ಆಡಳಿತಕ್ಕಿಂತಲೂ ಕಡೆಯಾಗಿದೆ. ವಾಕ್ ಸ್ವತಂತ್ರ ಕಿತ್ತುಕೊಳ್ಳುವುದು ಸಂವಿಧಾನದಲ್ಲಿ ಬರೆದಿದೆಯಾ ಸಿದ್ದರಾಮಯ್ಯನವರೇ? ನಿಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರೆ ನಿಮಗೆ ಯಾಕೆ ಸಂಕೋಚ?
ಡಿಕೆ ಶಿವಕುಮಾರ್ ರವರೇ ನಿಮ್ಮ ಸರ್ಕಾರದ ದುರಾಡಳಿತವನ್ನು, ಭ್ರಷ್ಟತೆಯನ್ನು, ಸುಭೀಕ್ಷವಾಗಿದ್ದ ರಾಜ್ಯದ ಆರ್ಥಿಕತೆಯನ್ನು ಹಾಳು ಮಾಡಿದ್ದನ್ನು, ಮಿತಿಮೀರಿದ ಓಲೈಕೆ ರಾಜಕಾರಣದ ಬಗ್ಗೆ ಮಾತನಾಡಿದರೆ ನಿಮಗೆ ಏಕೆ ಭಯ? ಖಾಸಗಿ ನ್ಯೂಸ್ ಚಾನೆಲ್ ಮುಖ್ಯಸ್ಥರನ್ನು ಬಂಧಿಸಲು ಕರ್ನಾಟಕದ ಪೊಲೀಸರನ್ನು ಕಳುಹಿಸಿರುವುದು ಯಾವ ಸಂದೇಶ ನೀಡುವುದಕ್ಕಾಗಿ? ನಿಮ್ಮ ಸರ್ಕಾರದ ವೈಫಲ್ಯ ಮುಚ್ಚಿಹಿಡಲು, ನಿಮ್ಮ ಆತಂಕ, ದುಗುಡ ಈ ಆದೇಶದಲ್ಲಿ ಭಾಸವಾಗುತ್ತಿದೆ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಈ ಮಾರ್ಗವನ್ನು ಹಿಡಿದಿರುವಂತೆ ಕಾಣುತ್ತಿದೆ ಸಿದ್ದರಾಮಯ್ಯನವರೇ! ನಿಮ್ಮ ಹತಾಶೆ ನಮಗೆ ಅರ್ಥವಾಗುತ್ತಿದೆ. ಆದರೆ, ಈ ಹಿಟ್ಲರ್ ಆಡಳಿತದ ಪದ್ದತಿ, ಮೊಘಲರ ಆಡಳಿತದ ಪದ್ದತಿಯನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ.