ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲಗಳಿವೆ. ಸರಕಾರ ಮಾಡಿರುವ ತಪ್ಪುಗಳನ್ನು ಜನ ಪ್ರಶ್ನಿಸುತ್ತಿದ್ದಾರೆ. ಎಲ್ಲದಕ್ಕೂ ಉತ್ತರ ಕೊಡುವ ಸಲುವಾಗಿ ವಿಶೇಷ ಅಧಿವೇಶನ ಕರೆಯುವಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದರು. ಇದೇ ವೇಳೆ ಬಿಜೆಪಿಯ ಎಲ್ಲ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು ಸಂತ್ರಸ್ತರ ಕುಟುಂಬಗಳಿಗೆ ನೀಡಲಿದ್ದಾರೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಲ್ತುಳಿತ ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ರಾಜ್ಯ ಕಾಂಗ್ರೆಸ್ ಸರಕಾರ ಉಲ್ಲಂಘಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಶಕ್ತಿಗಳ ತಿಕ್ಕಾಟ ಇಲ್ಲದಿದ್ದರೆ ಅಮಾಯಕರು ಸಾಯುತ್ತಿರಲಿಲ್ಲ. ಸರಣಿ ಸಾವು ಸಂಭವಿಸಿದ ಬಳಿಕವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಲ್ಲಿನ ಹೃದಯದವರು ಎಂದು ಆರೋಪಿಸಿದರು.
ಡಿಸಿಪಿ ಸಲಹೆ ಕಡೆಗಣನೆ
ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಹಾಗೂ ಸಿಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗಲಿದೆ ಎಂದು ಮುಖ್ಯ ಕಾರ್ಯದರ್ಶಿಗೆ ವಿಧಾನಸೌಧ ಡಿಸಿಪಿ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ವಿಜಯೋತ್ಸವ ನಿಷೇಧಿಸಬೇಕು ಎಂದೂ ಹೇಳಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಆಕ್ರೋಶ ಹೊರಹಾಕಿದರು.
ವೇದಿಕೆ ಮೇಲೆ ಕುಟುಂಬವರ್ಗದವರಿಗೆ ಅವಕಾಶ ಮಾಡಿಕೊಟ್ಟಿದ್ದು ಯಾವ ಶಿಷ್ಟಾಚಾರ? ಅತಿ ಭದ್ರತಾ ವಲಯವಾದ ವಿಧಾನಸೌಧ- ಹೈಕೋರ್ಟ್ ಮೇಲೆ ಡ್ರೋನ್ ಹಾರಿಸಿದ್ದು ತಪ್ಪಲ್ಲವೇ? ಸರಕಾರಿ ಕಾರ್ಯಕ್ರಮ ಎಂದು ದಾಖಲೆಗಳಲ್ಲಿ ಇದ್ದರೂ ಅದು ಸರಕಾರಿ ಕಾರ್ಯಕ್ರಮ ಅಲ್ಲ ಎಂದು ಸಿಎಂ ಹೇಳುತ್ತಿರುವುದೇಕೆ? ಪೊಲೀಸ್ ಅಧಿಕಾರಿಗಳ ಸಲಹೆ-ಸೂಚನೆಗಳನ್ನು ಸರಕಾರ ಹರಿದು ಕಸದ ಬುಟ್ಟಿಗೆ ಬಿಸಾಡಿದೆ ಎಂದು ಆರೋಪಿಸಿದರು.
ಬಿಜೆಪಿ ಶಾಸಕರ ಒಂದು ತಿಂಗಳ ವೇತನ ನೀಡಲು ಸಿದ್ಧ
ಇದೆಲ್ಲದರ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. ಕೂಡಲೇ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಈ ಸರಕಾರ ಪಾಪರ್ ಆಗಿಲ್ಲವೆಂದರೆ ಮೃತರ ಕುಟುಂಬಕ್ಕೆ ಕನಿಷ್ಠ ತಲಾ 1 ಕೋಟಿ ರೂ. ಪರಿಹಾರ ಕೊಡಬೇಕು. ಬಿಜೆಪಿ ಶಾಸಕರೆಲ್ಲರೂ ಒಂದು ತಿಂಗಳ ಸಂಬಳವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಿದ್ದೇವೆ ಎಂದು ಘೋಷಿಸಿದರು.