ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4 ರಂದು ಸಂಭವಿಸಿದ ಕಾಲ್ತುಳಿತ ಘಟನೆ ಸಂಬಂಧ ಅಮಾನತು ಮಾಡಲಾದ ಬೆಂಗಳೂರು ನಗರ ಮಾಜಿ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದುಪಡಿಸಲು, ಇಂಡಿಯನ್ ಪೊಲೀಸ್ ಫೌಂಡೇಶನ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ, ಪೂರ್ವ ತಯಾರಿ ಇಲ್ಲದೇ ಅಭಿಮಾನಿಗಳನ್ನು ಆಹ್ವಾನಿಸಿದ ಪರಿಣಾಮ ಭದ್ರತಾ ವ್ಯವಸ್ಥೆ ಕುಸಿದಿದ್ದು, ಪೊಲೀಸರು ಅನುಮತಿ ನಿರಾಕರಿಸಿದ್ದರೂ ಸರ್ಕಾರ ಮೆರವಣಿಗೆ ಆಯೋಜಿಸಿದ್ದದ್ದು ತೊಂದರೆ ತಂದಿತೆಂದು ತಿಳಿಸಿದ್ದಾರೆ.
ಐಪಿಎಲ್ ಕಪ್ ಗೆದ್ದ ಆರ್ಸಿಬಿಗೆ ಅಭಿನಂದನೆ ಸಲ್ಲಿಸಲು ಸರ್ಕಾರ ವಿಧಾನಸೌಧದ ಎದುರು ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದರೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೂ ಸಮಾರಂಭ ಏರ್ಪಡಿಸಲಾಯಿತು. ಇದರ ಪರಿಣಾಮ ಗೊಂದಲ ಉಂಟಾಗಿ ಕಾಲ್ತುಳಿತ ಸಂಭವಿಸಿತು.