ಬೆಂಗಳೂರು: ವೈದ್ಯರಾಗಬೇಕೆಂಬ ಕನಸು ಹೊತ್ತು ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ಕಾರಣಕ್ಕೂ ನಕಲಿ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕರೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆಯ ಮೂಲಕ ಅವರು, “ಸೀಟು ಪಡೆಯಬೇಕೆಂಬ ಆತುರದಿಂದ ತಪ್ಪು ನಿರ್ಧಾರ ತೆಗೆದುಕೊಳ್ಳಬಾರದು. ‘ಅವನಿಗೆ ಗೊತ್ತು’, ‘ಇವನೊಂದಿಗೆ ಸಂಪರ್ಕವಿದೆ’ ಎಂದು ಭರವಸೆ ನೀಡುವ ದಲ್ಲಾಳಿಗಳಿಂದ ಎಚ್ಚರರಾಗಬೇಕು,” ಎಂದು ಎಚ್ಚರಿಸಿದರು.
ಈ ವರ್ಷ ಕರ್ನಾಟಕದಲ್ಲಿ 1,47,782 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 1,42,369 ಮಂದಿ ಹಾಜರಾಗಿದ್ದಾರೆ. ಈ ಪೈಕಿ 83,582 ಮಂದಿ ಅರ್ಹತೆ ಪಡೆದಿದ್ದಾರೆ. ವೈದ್ಯಕೀಯ ಸೀಟುಗಳ ಹಂಚಿಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಸುವ್ಯವಸ್ಥಿತವಾಗಿ ನಡೆಯಲಿದೆ.
ಸೀಟು ಕೊಡಿಸುತ್ತೇನೆಂದು ವಿದ್ಯಾರ್ಥಿಗಳು ಅಥವಾ ಪೋಷಕರನ್ನು ದಿಕ್ಕು ತಪ್ಪಿಸಿ ಮೋಸ ಮಾಡಿದವರು ಕಂಡುಬಂದರೆ, ಅಂಥ ದಲ್ಲಾಳಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ. ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.