ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಬದ್ದವಾಗಿ ಕೆಲಸ ಮಾಡುತ್ತಿದೆ ಎಂದು ಸಾಲಿಗ್ರಾಮ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಉದಯಶಂಕರ್ ಹೇಳಿದರು.
ಸಾಲಿಗ್ರಾಮ ತಾಲೂಕಿನ ಚನ್ನಂಗೆರೆ ಗ್ರಾಮದ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ತಾಲೂಕು ಗ್ಯಾರಂಟಿ ಯೋಜನೆಗಳ ಅರಿವು ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪದೇ ಇದಲ್ಲಿ ಅಂತಹವರು ನೇರವಾಗಿ ಅನುಷ್ಠಾನ ಪ್ರಾಧಿಕಾರಕ್ಕೆ ಮತ್ತು ತಾಲೂಕು ಆಡಳಿತಕ್ಕೆ ದೂರು ನೀಡಬಹುದು ಎಂದರು.
ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ ಬಂದ ನಂತರ ಜನರ ಜೀವನ ಮಟ್ಟ ಸುಧಾರಿಸುವುದರ ಜತೆಗೆ ಸರ್ಕಾರದ ಯೋಜನೆಗಳು ನೇರವಾಗಿ ಅರ್ಹರ ಮನೆ ಬಾಗಿಲಿಗೆ ದೊರೆಯುತ್ತಿದ್ದು ಜನತೆ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ಯೋಜನೆಗಳ ಅನುಷ್ಠಾನದ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಎಚ್ಚರಿಕೆ ನೀಡಿದ ಅಧಿಕಾರಿಗಳು ಇದಕ್ಕೆ ಅವಕಾಶ ಮಾಡಿಕೊಡದಂತೆ ಎಲ್ಲರೂ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಗ್ಯಾರಂಟಿ ಯೋಜನೆಗಳ ಜನಪ್ರೀಯತೆ ಮತ್ತು ಅನುಕೂಲಗಳ ಬಗ್ಗೆ ಸಹಿಸದ ವಿರೋಧ ಪಕ್ಷಗಳು ಅಪಪ್ರಚಾರದಲ್ಲಿ ತೊಡಗಿದ್ದು ಇದಕ್ಕೆ ಯಾರು ಕಿವಿಗೊಡಬಾರದು ಎಂದ ಉದಯಶಂಕರ್ ನಮ್ಮ ಸರ್ಕಾರ ರಾಜ್ಯದಲ್ಲಿ ಇರುವವರೆಗೂ ಗ್ಯಾರಂಟಿ ಯೋಜನೆಗಳು ನಿರಂತರವಾಗಿರುತ್ತದೆ ಎಂದು ಘೋಷಿಸಿದರು.
ಕಾರ್ಯ ಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಬಂದ ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮತ್ತು ವಿದ್ಯಾರ್ಥಿಗಳು ಕಾವ್ಯ ವಾಚನ ಮಾಡಿ ಸಭೆಯ ಗಮನ ಸೆಳೆಯಿತು.
ಈ ಸಂಧರ್ಭದಲ್ಲಿ ಸೆಸ್ಕಾಂ, ಆಹಾರ ಇಲಾಖೆ, ರಸ್ತೆ ಸಾರಿಗೆ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೈಗಾರಿಕಾ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಇಲಾಖಾವರು ಸವಲತ್ತು ಮತ್ತು ಫಲಾನುಭವಿಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮ ಆರಂಭಕ್ಕೂ ಮೊದಲು ಪ್ರಾಧಿಕಾರದ ಅಧ್ಯಕ್ಷ ಉದಯಶಂಕರ್, ಪ್ರಾಧಿಕಾರದ ಸದಸ್ಯರುಗಳ ಮತ್ತು ಅಧಿಕಾರಿಗಳು ಚನ್ನಂಗೆರೆ ಗ್ರಾಮದ ಹತ್ತಾರು ಮನೆಗಳಿಗೆ ತೆರಳಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ ನಡೆಸಿ ಅವರ ಅಭಿಪ್ರಾಯ ಸಂಗ್ರಹಿಸಿದರು.
ಚನ್ನಂಗೆರೆ ಗ್ರಾ.ಪಂ.ಅಧ್ಯಕ್ಷೆ ಸುನೀತಾದಿನೇಶ್, ಮಾಜಿ ಅಧ್ಯಕ್ಷ ರಾದ ಅನಿತಾಕಾಂತರಾಜು, ಹರೀಶ್, ಸದಸ್ಯರಾದ ಅಶ್ವಥ್, ರಾಮಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಯೋಜನೆ ಪ್ರಾಧಿಕಾರದ ಸದಸ್ಯರಾದ ಮೂರ್ತಿ, ಮೋಹನ್, ವಾಸ್ಸಿಂ, ಲೋಕೇಶ್, ಮಹದೇವ, ರವಿ, ಉಷಾ, ತಾ.ಪಂ ಇಒ ರವಿ, ಚೆಸ್ಕಂ ಎಇಇ ಮಧುಸೂದನ್, ಆಹಾರ ಇಲಾಖೆಯ ಶಿರಸ್ತೇದಾರರಾದ ಕುಮಾರ್, ಸುರೇಶ್ ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.