ಮೈಸೂರು: ಮೈಸೂರು ನಗರದ ಕುಡಿಯುವ ನೀರಿನ ಪ್ರಗತಿ ಕಾಮಗಾರಿಗಳು(ಕಬಿನಿ, ಮೇಗಳಾಪುರ) ಹಾಗೂ ಮೈಸೂರು ನಗರದ ಇನ್ನಿತರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಮಹಾನಗರ ಪಾಲಿಕೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಒಳಗೊಂಡ ಸಮನ್ವಯ ಸಮಿತಿ ಸಭೆ ನಡೆಸಲಾಯಿತು.
ವಿಜಯನಗರದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮೈಸೂರು ನಗರದ ಕುಡಿಯುವ ನೀರಿನ ಕಾಮಗಾರಿಗಳು, ಮೈಸೂರು ವಿಮಾನ ನಿಲ್ದಾಣದ ಮಾರ್ಗ ಬದಲಾವಣೆ, ಮೈಸೂರು ನಗರದಲ್ಲಿ ಭೂಗತ(ಯುಜಿ) ಕೇಬಲ್ ಅಳವಡಿಕೆ ಕಾಮಗಾರಿ, ಪಿಎಂ ಕುಸುಮ್-ಸಿ ಯೋಜನೆ ಅನುಷ್ಠಾನಕ್ಕೆ ಭೂಮಿ ಮಂಜೂರು ಮಾಡುವುದು, ಮಳೆಯಿಂದಾಗಿ ಮೈಸೂರು ಜಿಲ್ಲೆಯಲ್ಲಿ ಸೆಸ್ಕ್ ವ್ಯಾಪ್ತಿಯ ಹಲವು ಕಡೆಗಳಲ್ಲಿ ಉಂಟಾಗಿರುವ ಹಾನಿ ಹಾಗೂ ಇತರ ವಿಷಯಗಳ ಕುರಿತಂತೆ ಸುಧೀರ್ಘ ಚರ್ಚೆ ನಡೆಸಲಾಯಿತು.
ಮೈಸೂರಿನಲ್ಲಿ ಜೂ.4ರಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಸೂಚನೆ ಮೇರೆಗೆ ಸಮನ್ವಯ ಸಮಿತಿ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶೇಖ್ ತನ್ವೀರ್ ಆಸೀಫ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ಎಂಡಿಎ ಆಯುಕ್ತರಾದ ರಕ್ಷಿತ್, ಮೈಸೂರು ವಲಯದ ಮುಖ್ಯ ಇಂಜಿನಿಯರ್ ಡಿ.ಜೆ. ದಿವಾಕರ್, ಸೆಸ್ಕ್ ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕ, ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್, ಮೈಸೂರು ವಿಭಾಗದ ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ಟಿ.ಎಸ್. ರಮೇಶ್ ಸೇರಿದಂತೆ ಮೈಸೂರು ಮಹಾನಗರ ಪಾಲಿಕೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನೀರು ಸರಬರಾಜು ನಿಗಮ, ಅರಣ್ಯ ಇಲಾಖೆಯ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.