ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ವ್ಯಕ್ತಿಯೊಬ್ಬನನ್ನ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ವಸಂತ್ (32) ಎಂದು ಗುರುತಿಸಲಾಗಿದ್ದು, ಕುಂಸಿ ಗ್ರಾಮದ ನಿವಾಸಿಯಾಗಿದ್ದಾನೆ. ಘಟನೆ ಚಿಕ್ಕಮರಸ ರಸ್ತೆಯಲ್ಲಿ ಸಂಭವಿಸಿದ್ದು, ಸಂಜೆ ವೇಳೆಗೆ ಗ್ರಾಮದ ಹೊರವಲಯದಲ್ಲಿ ವಸಂತ್ನ ಶವ ಪತ್ತೆಯಾಗಿದೆ. ಕೊಲೆಗಾರರು ಮಾರಕಾಸ್ತ್ರಗಳನ್ನು ಬಳಸಿ ವಸಂತ್ ಮೇಲೆ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಈ ಹತ್ಯೆ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ಇದರ ಬಗ್ಗೆ ನಿಖರ ಮಾಹಿತಿಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ನಡೆದ ಬಳಿಕ ಕುಂಸಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ದು, ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.