ವರದಿ : ಸ್ಟೀಫನ್ ಜೇಮ್ಸ್.
ಬೆಳಗಾವಿ: ದುಶ್ಚಟ ಮತ್ತು ಮದ್ಯವ್ಯಸನದಿಂದ ಹಲವಾರು ಕುಟುಂಬಗಳು ಸಮಸ್ಯೆಗೆ ಸಿಲುಕಿವೆ. ವ್ಯಸನ ಮುಕ್ತ ಸಮಾಜ ನಿರ್ಮಿಸಲು ಎಲ್ಲರೂ ಕೈ ಜೋಡಿಸಿ ಕೆಲಸ ಮಾಡಬೇಕಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ ಕೇಂದ್ರ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವತಿಯಿಂದ ನಗರದಲ್ಲಿ ಏರ್ಪಡಿಸಿರುವ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ಯುವಜನೋತ್ಸವಗಳು ಮನುಷ್ಯನಲ್ಲಿ ಸ್ಫೂರ್ತಿ ತುಂಬುತ್ತವೆ. ಜೀವನದಲ್ಲಿ ಸ್ಫೂರ್ತಿಯೇ ನಮ್ಮ ಶಕ್ತಿ. ಹೀಗಾಗಿ ಎಲ್ಲರೂ ಒಂದಾದಾಗ ಮಾತ್ರ ಸಂಸ್ಕಾರಯುತ ಸಮಾಜ ನಿರ್ಮಿಸಲು ಸಾಧ್ಯಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಆಸೀಫ್ ಸೇಶ್ ಮಾತನಾಡಿ, ಯುವಪೀಳಿಗೆ ಮೊಬೈಲ್ ಗೀಳು ಬಿಟ್ಟು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿದೆ. ಜತಗೆ ಹಬ್ಬ ಹರಿದಿನ, ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ಸಿಪಿಐ ಕಾಲಿಮಿರ್ಚಿ, ರಾಣಿ ಚನ್ನಮ್ಮ ವಿವಿ ಕುಲಸಚಿವ ಸಂತೋಷ ಕಾಮಗೌಡ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಬಿ.ಶ್ರೀನಿವಾಸ, ಸಂಗೊಳ್ಳಿ ರಾಯಣ್ಣ ಕಾಲೇಜ್ ಪ್ರಾಚಾರ್ಯ ಡಾ.ಎಸ್.ಸಿ.ಪಾಟೀಲ, ಯವ ಪ್ರಶಸ್ತಿ ಪುರಸ್ಕೃತರಾದ ಮಲ್ಲೇಶ ಚೌಗಲಾ, ಸಿದ್ದಣ್ಣ ದುರದುಂಡಿ, ವಿಠಲ ಮುರಕಿಬಾವಿ ಇತರರಿದ್ದರು.



                                    