ಮಂಗಳೂರು (ದಕ್ಷಿಣ ಕನ್ನಡ): ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸರ್ಕಲ್ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡ್ ನಲ್ಲಿ ಶನಿವಾರ ನಡೆದಿದೆ.
ಮೃತರನ್ನು ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ (23) ಎಂದು ಗುರುತಿಸಲಾಗಿದೆ. ಶನಿವಾರ ಮುಂಜಾನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ KA 02 AE 6146 ನೊಂದಣಿ ಸಂಖ್ಯೆಯ ಇನ್ನೋವಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳ ಬಿ.ಸಿ. ರೋಡ್ ಬಳಿ, ನಾರಾಯಣ ಗುರು ವೃತ್ತಕ್ಕೆ ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳಾದ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಸೇರಿದಂತೆ ಉಳಿದ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಂಬಂಧಿಕರಾಗಿದ್ದು, ಪ್ರಕರಣದ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ:151/25, ಕಲಂ: 281,125A, 106 BNS ರಂತೆ ಪ್ರಕರಣ ದಾಖಲಾಗಿದೆ.



