Tuesday, January 13, 2026
Google search engine

Homeರಾಜ್ಯಸುದ್ದಿಜಾಲಚಿಕ್ಕಮಗಳೂರು ಜಿಲ್ಲೆಯಲ್ಲಿ ಮಿತಿ ಮೀರಿದ ಚಿರತೆ ಹಾವಳಿ ಕೈ ಕಟ್ಟಿ ಕುಳಿತ ಅರಣ್ಯ ಇಲಾಖೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಿತಿ ಮೀರಿದ ಚಿರತೆ ಹಾವಳಿ ಕೈ ಕಟ್ಟಿ ಕುಳಿತ ಅರಣ್ಯ ಇಲಾಖೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, ಕಳೆದ ಒಂದು ವಾರದ ಹಿಂದಷ್ಟೇ ಐದು ವರ್ಷದ ಬಾಲಕಿಯನ್ನು ಬಲಿ ಪಡೆದ ಆಘಾತ ಮಾಸುವ ಮುನ್ನವೇ, ಇದೀಗ 11 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ತರೀಕೆರೆ ತಾಲ್ಲೂಕಿನ ಭೈರಾಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೀರೂರು ಸಮೀಪದ ನವಿಲೇಕಲ್ಲು ಗುಡ್ಡ ಗ್ರಾಮದಲ್ಲಿ ಬಸವರಾಜ ಅವರ ಪುತ್ರಿ ಐದು ವರ್ಷದ ಸಾನ್ವಿಯನ್ನು ಚಿರತೆ ಹೊತ್ತೊಯ್ದು ಬಲಿ ಪಡೆದಿತ್ತು. ಈ ಕರುಣಾಜನಕ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು.

ಈ ಭೀಕರ ಘಟನೆ ಮಾಸುವ ಮೊದಲೇ, ಲಿಂಗದಹಳ್ಳಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಮನೆಯ ಬಳಿ ನಿಂತಿದ್ದ 11 ವರ್ಷದ ಬಾಲಕ ಹೃದಯ್‌ ಎಂಬಾತನ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿದೆ.

ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಚಿರತೆಯ ಈ ನಿರಂತರ ಹಾವಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬುದು ಗ್ರಾಮಸ್ಥರ ದೂರು.

ಕೇವಲ ನಿನ್ನೆಯಷ್ಟೇ ತರೀಕೆರೆ ತಾಲೂಕಿನ ಕೆಂಚಾಪುರ ಗ್ರಾಮದ ಮೇರಿಯಮ ಎಂಬುವರ ಮನೆಯ ಸುತ್ತಮುತ್ತ ಚಿರತೆ ಓಡಾಡುತ್ತಿರುವ ಮತ್ತು ನೀರು ಕುಡಿಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಗ್ರಾಮಸ್ಥರು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.

ನಿರಂತರವಾಗಿ ಚಿರತೆಗಳು ಜನವಸತಿ ಪ್ರದೇಶಗಳಿಗೆ ನುಗ್ಗಿ ಮಕ್ಕಳು ಹಾಗೂ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದರೂ, ಅಧಿಕಾರಿಗಳು ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ವಿಲವಾಗಿರುವುದು ಸ್ಥಳೀಯರ ಆತಂಕಕ್ಕೆ ಮುಖ್ಯ ಕಾರಣವಾಗಿದೆ. ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಮನುಷ್ಯರ ಮೇಲೆ ದಾಳಿ ಮಾಡುತ್ತಿರುವ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular