ಬೆಂಗಳೂರು: ಇಲ್ಲಿನ ಯಲಹಂಕ ಬಳಿಯ ಕೋಗಿಲು ಬಡಾವಣೆ ತ್ಯಾಜ್ಯ ವಿಲೇವಾರಿ ಜಾಗದ ಅಕ್ರಮ ಒತ್ತುವರಿ ತೆರುವು ಪ್ರಕರಣ, ರಾಷ್ಟ್ರ ಮಟ್ಟದಲ್ಲಿ ಭಾರಿ ಚರ್ಚೆಗೆ ಗೀಡಾಗಿದ್ದು, ಈ ವಿಚಾರದಲ್ಲಿ ಕೇರಳ ನಾಯಕರ ಮಧ್ಯಪ್ರವೇಶಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ಬಿಜೆಪಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಸ್ವಾಭಿಮಾನವನ್ನು ಕೇರಳಕ್ಕೆ ಅಡವಿಟ್ಟಿದೆ ಎಂದು ಗಂಭೀರ ಆರೋಪ ಮಾಡಿದೆ.
ಈ ಕುರಿತು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಕನ್ನಡದ ಸ್ವಾಭಿಮಾನವನ್ನು ಕೇರಳದ ಮುಂದೆ ಅಡವಿಟ್ಟಿರುವ ಭಂಡ ಹಾಗೂ ಭ್ರಷ್ಟರು!! ಎಂದು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಅಲ್ಲದೆ ಕೋಗಿಲು ಒತ್ತುವರಿ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ರೀತಿಯನ್ನು ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಕೋಗಿಲು ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕೇರಳ ನಾಯಕರ ಮಧ್ಯಪ್ರವೇಶವನ್ನು ಪ್ರಶ್ನಿಸಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೂ ಕನ್ನಡಿಗರ ಆತ್ಮಗೌರವ ಮಣ್ಣುಪಾಲು ಮಾಡಿದ ಆರೋಪ ಹೊರಿಸಿದೆ.
ಅಲ್ಲದೇ ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆಯನ್ನು ಖಂಡಿಸಿದೆ. ಕೋಗಿಲು ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕರ್ನಾಟಕ ಸರ್ಕಾರ ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ರಾಜ್ ನೀತಿ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಅಲ್ಲದೇ ಸಂತ್ರಸ್ತರಿಗೆ ನೆರವಾಗುವಂತೆ ಕೇರಳದ ಆಡಳಿತಾರೂಢ ಎಲ್ಡಿಎಫ್ನ ಹಲವು ನಾಯಕರು ಒತಾಯಿಸಿದ್ದರು.
ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ವಾಸ್ತವ ಸಂಗತಿಗಳನ್ನು ಮರೆಮಾಚಿ ರಾಜಕೀಯ ಟೀಕೆ ಮಾಡುವುದು ಸರಿಯಲ್ಲ ಎಂದು ಗುಡುಗಿದ್ದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಕೂಡ, ಕೇರಳ ನಾಯಕರ ಪ್ರತಿಕ್ರಿಯೆಗಳನ್ನು ಅನಗತ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಪ್ರತಿಪಕ್ಷ ಬಿಜೆಪಿ ಕೋಗಿಲು ಪ್ರಕರಣವನ್ನು ರಾಜ್ಯದ ಸ್ವಾಭಿಮಾನದೊಂದಿಗೆ ತಳುಕು ಹಾಕಿದ್ದು, ಕೇರಳದ ಅನಗತ್ಯ ಮಧ್ಯಪ್ರವೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ವಿಚಾರವಾಗಿ ರಾಜ್ಯ ಬಿಜೆಪಿ ಘಟಕ ಮಾಡಿರುವ ಟ್ವೀಟ್ ಇದೀಗ ರಾಜ್ಯಾದ್ಯಂತ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದು, ಬಿಜೆಪಿ ಆರೋಪಗಳಿಗೆ ಕಾಂಗ್ರೆಸ್ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಇದೇ ವಿಚಾರವಾಗಿ ನಿನ್ನೆ (ಡಿ.28-ಭಾನುವಾರ) ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇರಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ರಾಜಕೀಯ ನಾಯಕರು ಕೋಗಿಲು ಬಡಾವಣೆಯ ಅಕ್ರಮ ನಿವಾಸಿಗಳ ತೆರವುಗೊಳಿಸಿರುವ ಕ್ರಮವನ್ನು ಖಂಡಿಸುತ್ತಿದ್ಧಾರೆ. ಇದಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ.



