ಜಿ ರಾಮ್ ಜಿ ಕಾಯ್ದೆ ಕುರಿತು ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ದವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ. ಅವರು ಮಂಗಳವಾರ
ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮನ್ರೇಗಾದ ನ್ಯೂನತೆಗಳನ್ನು ಸರಿಪಡಿಸಿ ಹೊಸ ಕಾಯ್ದೆ ತರಲಾಗಿದೆ. ಜಿ ರಾಮ್ ಜಿ ಕಾಯ್ದೆಯಲ್ಲಿ ಗಾಂಧೀಜಿಯವರ ಪ್ರೀತಿಯ ರಾಮನ ಹೆಸರನ್ನು ತರಲಾಗಿದೆ ಎಂದರು.
ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ನಡೆಸುವ ಮಾತನ್ನಾಡುತ್ತಿದ್ದಾರೆ. ಆದರೆ, ಕೇಂದ್ರದ ಕಾಯ್ದೆ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಚರ್ಚಿಸುವುದು ಅಸಂವಿಧಾನಿಕ. ಈ ನಿರ್ಧಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ ಎಂದರು.
ಸಿಎಂ ಸಿದ್ದರಾಮಮಯ್ಯ ಅವರು ಸುಳ್ಳು ಹೇಳಿಕೆಗಳನ್ನೇ ನೀಡುತ್ತಿದ್ದಾರೆ. ಕಳೆದ ಬಜೆಟ್ನ ಶೇ.50ರಷ್ಟು ಅನುದಾನವೂ ಖರ್ಚಾಗಿಲ್ಲ. ಇನ್ನು ಎರಡು ತಿಂಗಳಲ್ಲಿ ಮತ್ತೆ ಬಜೆಟ್ ಬರಲಿದೆ. ಗಾಳಿ ಹೊರತುಪಡಿಸಿ ಬೇರೆ ಎಲ್ಲದಕ್ಕೂ ರಾಜ್ಯ ಸರಕಾರ ತೆರಿಗೆ ಹಾಕುತ್ತಿದೆ ಅಥವಾ ತೆರಿಗೆ ಹೆಚ್ಚಳ ಮಾಡಿದೆ. ಆದರೆ, ಅಭಿವೃದ್ಧಿ ಕುಂಠಿತವಾಗಿದೆ. ರಸ್ತೆ ಹೊಂಡವನ್ನೂ ಮುಚ್ಚುತ್ತಿಲ್ಲ ಎಂದು ದೂರಿದರು.
ಪ್ರೆಸ್ ಮೀಟ್ ನಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್, ಜಿಲ್ಲಾ ವಕ್ತಾರರಾದ ಸತೀಶ್ ಪ್ರಭು, ಅರುಣ್ ಶೇಟ್, ರಾಜಗೋಪಾಲ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಮೂಡುಶೆಡ್ಡೆ, ಮಾಧ್ಯಮ ಪ್ರಮುಖ್ ಮನೋಹರ ಶೆಟ್ಟಿ ಹಾಜರಿದ್ದರು.
ವರದಿ: ಶಂಶೀರ್ ಬುಡೋಳಿ



