ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿ ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ನಿಜ ಶರಣ ಅಂಬಿಗರ ಚೌಡಯ್ಯ ಸಮಾಜ ಸೇವಾ ಸಂಘ ಮುಲ್ಕಿ, ಮಂಗಳೂರು ಇವರ ಸಹಕಾರದೊಂದಿಗೆ ಅಂಬಿಗರ ಚೌಡಯ್ಯ ಜಯಂತಿಯನ್ನು ಮಂಗಳೂರು ನಗರದ ಉರ್ವ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಉದ್ಘಾಟಿಸಿ ಮಾತನಾಡಿ, ಅಂಬಿಗರ ಚೌಡಯ್ಯ ಅವರು ಶ್ರಮ, ಸ್ವಾಭಿಮಾನ ಹಾಗೂ ಸಾಮಾಜಿಕ ಸಮಾನತೆಯ ಪ್ರತೀಕವಾಗಿದ್ದು, ಅವರ ಜೀವನ ಮೌಲ್ಯಗಳು ಇಂದಿನ ಸಮಾಜಕ್ಕೆ ಪ್ರೇರಣೆಯಾಗಿದೆ ಎಂದರು.
ಹಾಗೂ ಅವರ ಆದರ್ಶಗಳ ಕುರಿತು ವಿವರಿಸಿದರು. ಚೌಡಯ್ಯರ ತತ್ವಗಳು ಇಂದಿನ ಪೀಳಿಗೆಯ ಬದುಕಿಗೆ ದಾರಿದೀಪವಾಗಿವೆ ಎಂದು ಹೇಳಿದರು.
ಮೂಡಬಿದ್ರಿ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ. ಸುಲತಾ ಹೆಬ್ರಿ ಮಾತನಾಡಿ, ಅಂಬಿಗರ ಚೌಡಯ್ಯರ ಜೀವನ, ಸಾಮಾಜಿಕ ಹೋರಾಟ ಹಾಗೂ ಅವರ ಆದರ್ಶಗಳ ಕುರಿತು ಉಪನ್ಯಾಸ ನೀಡಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಮೊಗವೀರ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್ ಮಾತನಾಡಿ, ಅಂಬಿಗರ ಸಮುದಾಯದ ಇತಿಹಾಸ ಮತ್ತು ಸಮಾಜದ ಅಭಿವೃದ್ಧಿಗೆ ಅವರ ಕೊಡುಗೆಗಳನ್ನು ಸ್ಮರಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ಬಬಿತಾ ನಿರೂಪಿಸಿದರು.
ವರದಿ: ಶಂಶೀರ್ ಬುಡೋಳಿ



