ಬೆಂಗಳೂರು : ಗಾಂಧೀಜಿ ಹೆಸರಿನ ಮನರೇಗಾ ಯೋಜನೆ ಕೈಬಿಟ್ಟು ಕೇಂದ್ರ ಸರ್ಕಾರ ಹೊಸದಾಗಿ ತಂದಿರುವ ಜಿ ರಾಮ್ ಜಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ, ಲೋಕಭವನ ಚಲೋ ಮೂಲಕ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ.
ಈ ವೇಳೆ ಮನರೇಗಾ ಮರು ಜಾರಿಯಾಗುವವರೆಗೆ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲಾಗುವುದು. ಕರಾಳ ಕೃಷಿ ಕಾಯ್ದೆ ವಿರುದ್ಧ ನಡೆದ ರೈತ ಚಳವಳಿ ಮಾದರಿಗೆ ಈ ಹೋರಾಟ ಕೊಂಡೊಯ್ಯುವುದಾಗಿ ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ.
ನಗರದ ಫ್ರೀಡಂ ಪಾರ್ಕ್ನಲ್ಲಿ ಕೆಪಿಸಿಸಿಯಿಂದ ‘ಮನರೇಗಾ ಬಚಾವೋ ಆಂದೋಲನ’ದ ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಹಾಗೂ ‘ರಾಜ್ ಭವನ ಚಲೋ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ವಿವಿಧ ಸಚಿವರು, ಶಾಸಕರು, ಪಕ್ಷದ ಮುಖಂಡರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು ಸೇರಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹರಿಹಾಯ್ದರು.
ಇನ್ನೂ ಜಿ ರಾಜ್ ಜಿ ಕಾಯ್ದೆ ಹಿಂಪಡೆದು ಮನರೇಗಾ ಮರು ಜಾರಿಗೆ ಭಿತ್ತಿಪತ್ರ ಹಿಡಿದು ಆಗ್ರಹಿಸಿದರು. ಕೇಂದ್ರ ಸರ್ಕಾರ ಮನರೇಗಾ ಕೈಬಿಟ್ಟು ಹೊಸ ಕಾಯ್ದೆ ತರುವ ಮೂಲಕ ದುಡಿಯುವ ಕೈಗಳ ಕೆಲಸ, ಅನ್ನ ಕಸಿಯಲಿದೆ. ಗ್ರಾಪಂಗಳ ಅಧಿಕಾರ ಮೊಟಕುಗೊಳಿಸಲಿದೆ. ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದೆ. ಹಾಗಾಗಿ ಇದನ್ನು ಹಿಂಪಡೆಯುವವರೆಗೂ ಹೋರಾಟ ನಿಲ್ಲಿಸುವುದಿಲ್ಲ.
ಅಲ್ಲದೆ ಮುಂದೆ ಪ್ರತಿ ತಾಲೂಕು ಮಟ್ಟದಲ್ಲೂ 5 ಕಿ.ಮೀ. ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಲಾಗುವುದು. ಗ್ರಾಪಂ ಹಂತದವರೆಗೆ ಹೋರಾಟ ಕೊಂಡೊಯ್ದು ಜನಪರ ‘ಮನರೇಗಾ’ ರದ್ದಿನ ದುಷ್ಪರಿಣಾಮಗಳ ಬಗ್ಗೆ ಜನ ಜಾಗೃತಿ ಮೂಡಿಸುತ್ತೇವೆ. ಅಗತ್ಯ ಬಿದ್ದರೆ ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆದ ರೈತ ಚಳವಳಿ ಮಟ್ಟಕ್ಕೆ ಈ ಹೋರಾಟ ಕೊಂಡೊಯ್ಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರ ನಾಯಕರು ಘರ್ಜಿಸಿದರು.
ಅಷ್ಟೇ ಅಲ್ಲದೆ, ಮನರೇಗಾ ಯೋಜನೆಗಾಗಿ ಜೈಲಿಗೆ ಹೋಗಲೂ ಸಿದ್ಧ. ಕೇಂದ್ರ ಸರ್ಕಾರ ನಮ್ಮ ಮಂತ್ರಿಗಳನ್ನೂ ಸೇರಿಸಿ ಪಕ್ಷದ ಎಲ್ಲ ನಾಯಕರನ್ನೂ ಬಂಧಿಸಲಿ. ನಾವು ಹೆದರುವುದಿಲ್ಲ. ಕೇಂದ್ರ ಸರ್ಕಾರ ಕೂಡಲೇ ಜಿ ರಾಮ್ ಜಿ ವಾಪಸ್ ಪಡೆದು ಮನರೇಗಾ ಮರು ಜಾರಿಗೊಳಿಸಬೇಕು. ಅಲ್ಲಿಯವರೆಗೂ ಹೋರಾಟದಿಂದ ವಿಮುಖರಾಗುವುದಿಲ್ಲ ಎಂದಿದ್ದಾರೆ.
ಇನ್ನೂ ಕೇಂದ್ರದ ಬಿಜೆಪಿ ಸರ್ಕಾರ ಧ್ವೇಷ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ತಂದ ಜನರ ಯೋಜನೆಗಳನ್ನು ಒಂದೊಂದಾಗಿ ರದ್ದುಪಡಿಸಿಕೊಂಡು ಬರುತ್ತಿರುವುದು ಖಂಡನೀಯ.
ತಮ್ಮ ಅಧಿಕಾರಾವಧಿಯಲ್ಲಿ ಬಂಡವಾಳಶಾಹಿಗಳ 23 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡುವ ಬಿಜೆಪಿಯವರಿಗೆ ಬಡವರ ಯೋಜನೆಗಳಿಗೆ ಹಣ ಒದಗಿಸುತ್ತಿಲ್ಲವೇಕೆ? ದೇಶವನ್ನು ಎಲ್ಲಿಗೆ ಕೊಂಡೊಯ್ಯಲಾಗುತ್ತಿದೆ? ಇದರ ವಿರುದ್ಧ ಜನಾಂದೋಲನ ರೂಪುಗೊಳ್ಳಬೇಕು. ರೈತರು, ಕಾರ್ಮಿಕರು, ಯುವಕರು, ಮಹಿಳೆಯರು ಸೇರಿ ದೇಶದ ಪ್ರತಿಯೊಬ್ಬ ನಾಗರಿಕನೂ ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಸಿಡಿದೇಳಬೇಕು ಎಂದು ಕರೆ ನೀಡಿದರು.



