ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದ್ದು, ಇತ್ತೀಚೆಗಷ್ಟೇ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದ್ದರು. ಈ ಬೆನ್ನಲ್ಲೇ 24 ಮಂದಿ ವಿಧಾನ ಪರಿಷತ್ ಸದಸ್ಯರೂ ಪತ್ರ ಬರೆದಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಪರಿಷತ್ ಸದಸ್ಯರು, ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದ್ದು, ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ 24 ಎಂಎಲ್ಸಿಗಳು ಸಹಿ ಮಾಡಿದ ಪತ್ರವನ್ನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.
ಅಲ್ಲದೆ ಸಂಪುಟದಲ್ಲಿ ಎಂಎಲ್ಸಿಗಳಿಗೆ ಪ್ರಾತಿನಿಧ್ಯ ಇಲ್ಲದಿರುವುದು ಅಸಮಾನತೆ, ನಿರುತ್ಸಾಹ ಭಾವನೆ ಉಂಟುಮಾಡುತ್ತೆ. ಇದು ಎಂಎಲ್ಸಿಗಳಿಗೆ ರಾಜಕೀಯ ನಿರೀಕ್ಷೆಗಳಿಲ್ಲ ಎಂಬ ಗ್ರಹಿಕೆಗೆ ಕಾರಣವಾಗಿದ್ದು, ಸಮರ್ಥ ನಾಯಕರು ಎಂಎಲ್ಸಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಬದಲು ವಿಧಾನಸಭಾ ಟಿಕೆಟ್ಗಳನ್ನ ಪಡೆಯಲು ಮುಂದಾಗುತ್ತಾರೆ. ನಂತರ ಇದು ಗುಂಪುಗಾರಿಕೆಗೆ ಕಾರಣವಾಗುತ್ತದೆ ಮತ್ತು ಪಕ್ಷದ ಸಂಘಟನೆಯನ್ನು ದುರ್ಬಲಗೊಳಿಸುತ್ತದೆ. ಎಲ್ಲಾ ಎಂಎಲ್ಸಿಗಳು ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ಆಳವಾಗಿ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ವಿಧಾನ ಪರಿಷತ್ತಿನ ಕನಿಷ್ಠ 5 ಸದಸ್ಯರನ್ನ ಸಚಿವ ಸಂಪುಟದಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಒಬ್ಬರು, ಪದವೀಧರ ಅಥವಾ ಶಿಕ್ಷಕರ ಕ್ಷೇತ್ರಗಳಿಂದ ಒಬ್ಬರು, ಕೆಳಮನೆ ಅಥವಾ ನಾಮನಿರ್ದೇಶಿತ ವರ್ಗದಿಂದ ಒಬ್ಬ ಎಂಎಲ್ಸಿಯನ್ನ ಆಯ್ಕೆ ಮಾಡುವಂತೆ ಮನವಿ ಮಾಡಿ ಪತ್ರ ಸಲ್ಲಿಸಿದ್ದಾರೆ.



