Tuesday, March 3, 2026
Google search engine

Homeರಾಜಕೀಯಭಾರತೀಯರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳಬೇಕು : ಮೋದಿ ಗೆ ಸಿಎಂ ಪತ್ರ

ಭಾರತೀಯರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳಬೇಕು : ಮೋದಿ ಗೆ ಸಿಎಂ ಪತ್ರ

ಬೆಂಗಳೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ತೊಂದರೆಗೊಳಗಾದ ಕನ್ನಡಿಗರು ಮತ್ತು ಇತರೆ ಭಾರತೀಯರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳಬೇಕು, ವಿಶೇಷ ವಿಮಾನ ವ್ಯವಸ್ಥೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಯುದ್ಧದ ಸ್ಥಿತಿಯಿಂದಾಗಿ ​ಅನೇಕ ದೇಶಗಳು ತಮ್ಮ ವಾಯುಮಾರ್ಗವನ್ನು ಬಂದ್ ಮಾಡಿರುವುದರಿಂದ ವಿಮಾನ ಸಂಚಾರ ಸ್ಥಗಿತಗೊಂಡಿದ್ದು, ಇದರಿಂದಾಗಿ ದುಬೈ ಸೇರಿ ಮಧ್ಯಪ್ರಾಚ್ಯ ಹಾಗೂ ಪಶ್ಚಿಮ ಏಷ್ಯಾದ ಪ್ರಮುಖ ಸ್ಥಳಗಳಲ್ಲಿ ಸಾವಿರಾರು ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಈಗಾಗಲೇ ಸರ್ಕಾರದ ಮುಖ್ಯಕಾರ್ಯದರ್ಶಿ ಅವರು ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ವಿಮಾನಯಾನ ಸಚಿವಾಲಯಗಳಿಗೆ ಪತ್ರ ಬರೆದಿದ್ದಾರೆ.

ಅದರಂತೆ ಅಗತ್ಯ ಕ್ರಮ ಕೈಗೊಂಡು ಸುರಕ್ಷಿತವಾಗಿ ಕರೆತರಬೇಕು ಸಿದ್ದರಾಮಯ್ಯ ಕೋರಿದ್ದು, ಇದೇ ವೇಳೆ ಅಲ್ಲಿನ ಭಾರತೀಯ ರಾಯಭಾರ ಕಚೇರಿಗಳು ಕನ್ನಡಿಗರಿಗೆ ನಿರಂತರ ಮಾರ್ಗದರ್ಶನ ಮತ್ತು ರಕ್ಷಣೆ ನೀಡಬೇಕು.​ ಪರಿಸ್ಥಿತಿ ಹದಗೆಟ್ಟರೆ, ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಬೇಕು.

ವಿದೇಶಾಂಗ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ಸಾಧಿಸಲು ಒಂದು ಕಾರ್ಯಪಡೆ ರಚಿಸಬೇಕು. ಸಂಕಷ್ಟದಲ್ಲಿರುವವರನ್ನು ಪತ್ತೆಹಚ್ಚಲು ಮತ್ತು ಅವರ ಕುಟುಂಬಗಳಿಗೆ ಮಾಹಿತಿ ನೀಡಲು ಕೇಂದ್ರೀಕೃತ ಡಿಜಿಟಲ್ ವ್ಯವಸ್ಥೆ ರೂಪಿಸಬೇಕು.​ ಜತೆಗೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಟಿಕೆಟ್ ಮರುಹೊಂದಿಸಲು ಅನುವು ಮಾಡಿಕೊಡಬೇಕು. ಟಿಕೆಟ್‌ ರದ್ದು ಮತ್ತಿತರ ಕಾರಣಗಳಿಗೆ ವಿಧಿಸಬಹುದಾದ ದಂಡ ಮನ್ನಾ ಮಾಡಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನೂ ಮಧ್ಯಪ್ರಾಚ್ಯ ಹಾಗೂ ಪಶ್ಚಿಮ ಏಷ್ಯಾದಲ್ಲಿ ದುಡಿಯುತ್ತಿರುವ ಯುವಕರು ದೇಶದ ಆರ್ಥಿಕತೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಂತಹ ಸಂಕಷ್ಟ ಸ್ಥಿತಿಯಲ್ಲಿ ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರಬೇಕು. ರಾಜ್ಯ ಸರ್ಕಾರವು ಈಗಾಗಲೇ ರಾಜ್ಯ ಹಾಗೂ ಜಿಲ್ಲಾ ಮಟ್ಟದ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ಸಕ್ರಿಯಗೊಳಿಸಿದೆ. ದೆಹಲಿಯಲ್ಲಿರುವ ನಿವಾಸಿ ಆಯುಕ್ತರೊಂದಿಗೆ ಸಮನ್ವಯ ಸಾಧಿಸಿದೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲಾ ಸಹಕಾರ ನೀಡಲಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular