ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.೯ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆ.೧೬ರಂದು ಶ್ರೀ ಕೃಷ್ಣ ಜಯಂತಿ ಆಚರಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸೂಚಿಸಿದರು.
ಅವರು ಆ. ೨ರ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ನುಲಿಯ ಚಂದಯ್ಯ ಅವರು ಜಯಂತಿ ಕಾರ್ಯಕ್ರಮವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಬೇಕು ಹಾಗೂ ಶ್ರೀ ಕೃಷ್ಣ ಜಯಂತಿಯನ್ನು ಹಳೆ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ಚರ್ಚಿಸಲಾಗಿದೆ, ಅದರಂತೆ ಆಯಾ ಸ್ಥಳಗಳಲ್ಲಿ ಜಯಂತಿಯನ್ನು ಆಚರಿಸುವಂತೆ ಅವರು ತಿಳಿಸಿದರು.
ಈ ಎರಡೂ ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ಕುರಿತು ಉಪನ್ಯಾಸ ನೀಡಲು ನುರಿತ ಉಪನ್ಯಾಸಕರನ್ನು ನಿಯೋಜಿಸಬೇಕು. ಅವರ ಭಾವಚಿತ್ರಕ್ಕೆ ಪುಷ್ಟಗಳಿಂದ ಅಲಂಕರಿಸಬೇಕು. ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಲಘು ಉಪಹಾರದ ವ್ಯವಸ್ಥೆ ಮಾಡಬೇಕು ಎಂದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಬೇಕು. ಜಯಂತಿ ದಿನಗಳಂದು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಾಗಬೇಕು. ಒಟ್ಟಾರೆ ಎರಡೂ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸತೀಶ್, ಮುಖಂಡರುಗಳಾದ ಗುಡ್ಡೆ ವೆಂಕಟೇಶ್, ಚಲುವರಾಜು, ಶಿವಶಂಕರ್, ಗಿರೀಶ್, ರಕ್ಷಣಾ ವೇದಿಕೆ ರಾಜು, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.