ಅಹಮದಾಬಾದ್ : ಇತ್ತೀಚೆಗೆ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 274 ಕ್ಕೆ ಏರಿದೆ. ಈ ದುರಂತವು ಜನನಿಬಿಡ ವಸತಿ ಪ್ರದೇಶದಲ್ಲಿ ಸಂಭವಿಸಿದ್ದರಿಂದ ವಿಮಾನದಲ್ಲಿದ್ದ ಪ್ರಯಾಣಿಕರಲ್ಲದೆ ಕನಿಷ್ಠ 33 ಮಂದಿ ಸ್ಥಳೀಯ ನಾಗರಿಕರೂ ಕೂಡಾ ಮೃತರಾದರು. ಈ ಪೈಕಿ ಪ್ರತಿಯೊಬ್ಬರಿಗೂ ಟಾಟಾ ಗ್ರೂಪ್ ತಲಾ ₹1 ಕೋಟಿ ಪರಿಹಾರ ಘೋಷಿಸಿದೆ.
ಅಪಘಾತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರಲ್ಲಿ ವೈದ್ಯರು, ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವ ಮೇಘನಿನಗರ ಪ್ರದೇಶದ ಸ್ಥಳೀಯ ನಿವಾಸಿಗಳು ಸೇರಿದ್ದಾರೆ ಎನ್ನಲಾಗಿದೆ.
ವಿಮಾನದಲ್ಲಿ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಅಪಘಾತದಲ್ಲಿ ಒಬ್ಬರು ಬದುಕುಳಿದಿದ್ದಾರೆ. ಉಳಿದ 33 ಸಂತ್ರಸ್ತರು ಅಪಘಾತದ ಸಮಯದಲ್ಲಿ ಅಹಮದಾಬಾದ್ನ ಬಿಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿದ್ದ ವ್ಯಕ್ತಿಗಳಾಗಿರಬಹುದು ಎನ್ನಲಾಗಿದೆ.
ಹಣಕಾಸಿನ ಪರಿಹಾರವನ್ನು ಹೊರತುಪಡಿಸಿ ಹತ್ತಿರದ ಸಂಬಂಧಿಕರಿಗೆ ಉದ್ಯೋಗ ನೀಡುವಂತಹ ಯೋಜನೆಯ ಬಗ್ಗೆ ಟಾಟಾ ಗ್ರೂಪ್ ಯೋಚಿಸಿದೆಯೇ ಎಂದು ಅಧಿಕಾರಿಗಳನ್ನು ಕೇಳಿದಾಗ , “ಸದ್ಯಕ್ಕೆ ಏನನ್ನೂ ನಿರ್ಧರಿಸಲಾಗಿಲ್ಲ. ನಾವು ಇನ್ನೂ ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದೇವೆ ಮತ್ತು ತನಿಖೆ ಪ್ರಾರಂಭವಾಗಿದೆ” ಎಂದು ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಟಾಟಾ ಗ್ರೂಪ್ ಘೋಷಿಸಿದ ಒಂದು ಕೋಟಿ ರೂ.ಗಳ ಹೊರತಾಗಿ, ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಿಗೆ ವಿಮಾ ಕಂಪನಿಗಳಿಂದ ಸುಮಾರು 1.5 ಕೋಟಿ ರೂ.ಗಳ ಪರಿಹಾರವೂ ಸಿಗಲಿದೆ.