ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಬಂದಿದ್ದು ಅವರು ೧೦ ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ಅವರಂತೆ ಹತ್ಯೆಯಾಗುತ್ತಾರೆ ಎಂಬ ಸಂದೇಶ ಬಂದಿದೆ.
ಮುಂಬೈ ಪೊಲೀಸರಿಗೆ ಶನಿವಾರ ಸಂಜೆ ಬೆದರಿಕೆ ಸಂದೇಶವೊಂದು ಬಂದಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ೧೦ ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ ಅವರಂತೆಯೇ ಹತ್ಯೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಸಂದೇಶವನ್ನು ಯಾರು ಕಳುಹಿಸಿದ್ದಾರೆ ಎಂಬುದನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ ೧೨ ರಂದು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ಬಾಬಾ ಸಿದ್ದಿಕ್ ಅವರನ್ನು ಅವರ ಮಗ ಜೀಶನ್ ಸಿದ್ದಿಕ್ರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು.
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ೨ ಕೋಟಿ ರೂಪಾಯಿ ಬೇಡಿಕೆಯೊಡ್ಡಿ ಸಂದೇಶ ಬಂದಿದ್ದು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಯೋಗಿ ಅವರಿಗೆ ಬೆದರಿಕೆ ಸಂದೇಶ ಬಂದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.