ಲಕ್ನೋ : ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಹಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣ ಇದೀಗ ಉತ್ತರ ಪ್ರದೇಶ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ದೇಣಿಗೆ ಹಣ ಹಿಂದಿರುಗಿಸುವಂತೆ ಕೇಳುವವರ ವಿರುದ್ಧ ಉತ್ತರ ಪ್ರದೇಶ ವಿಧಾನಸಭಾ ಸ್ಪೀಕರ್ ಸತೀಶ್ ಮಹಾನ ನೀಡಿದ ಹೇಳಿಕೆಗೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ದೇಣಿಗೆ ಹಣದಲ್ಲಿ ಅಕ್ರಮ ನಡೆದಿದ್ದರೆ ಭಕ್ತರ ಹಣವನ್ನು ಹಿಂದಿರುಗಿಸಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸತೀಶ್ ಮಹಾನ, ದೇಣಿಗೆ ನೀಡಿದ ಹಣವನ್ನು ವಾಪಸ್ ಕೇಳುವವರು ನಿಜವಾದ ಭಕ್ತಿಯಿಂದ ಕಾಣಿಕೆ ನೀಡಿರಲಾರರು ಎಂದು ಹೇಳಿದ್ದರು.
ಈ ಹೇಳಿಕೆಗೆ ಉತ್ತರ ಪ್ರದೇಶ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಭಕ್ತರ ಭಾವನೆಗಳನ್ನು ಪ್ರಶ್ನಿಸುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಟೀಕಿಸಿದ್ದು, ಸರ್ಕಾರದ ವೈಫಲ್ಯವನ್ನು ಪ್ರಶ್ನಿಸುವ ಬದಲು ದೇಣಿಗೆ ನೀಡಿದವರ ಉದ್ದೇಶವನ್ನೇ ಪ್ರಶ್ನಿಸಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ.
ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸತೀಶ್ ಮಹಾನ, ತಮ್ಮ ಹೇಳಿಕೆ ಇಡೀ ಭಕ್ತ ಸಮುದಾಯವನ್ನು ಉದ್ದೇಶಿಸಿ ನೀಡಿದ್ದಲ್ಲ. ದಿಗ್ವಿಜಯ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಮಾತ್ರ ಆ ಮಾತು ಹೇಳಲಾಗಿದೆ ಎಂದು ಸ್ಪಷ್ಟಪಡಿಸಿದರು. ತಪ್ಪು ಮಾಡಿದವರು ಯಾರೇ ಆಗಿದ್ದರೂ ಶಿಕ್ಷೆಯಾಗಬೇಕು ಎಂಬ ನಿಲುವು ಸರ್ಕಾರದ್ದಾಗಿದೆ. ಇದರ ನಡುವೆ ದೇಣಿಗೆ ಹಣದ ಅವ್ಯವಹಾರ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ತೀವ್ರಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿಯನ್ನು ಬಂಧಿಸಲಾಗಿದ್ದು, ಆರೋಪಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳು, ಸಿಸಿಟಿವಿ ಡಿವಿಆರ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಅವ್ಯವಹಾರದ ಹಣವನ್ನು ಷೇರು ಮಾರುಕಟ್ಟೆ ಹೂಡಿಕೆ, ಬಡ್ಡಿ ವ್ಯವಹಾರ ಹಾಗೂ ದುಬಾರಿ ವಸ್ತುಗಳ ಖರೀದಿಗೆ ಬಳಸಿರುವ ಶಂಕೆ ವ್ಯಕ್ತವಾಗಿದೆ. ನಗದು, ಚಿನ್ನ, ಬೆಳ್ಳಿ ಹಾಗೂ ವಿದೇಶಿ ಕರೆನ್ಸಿ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತನಿಖಾ ತಂಡ ತಿಳಿಸಿದೆ.
ಜೂನ್ನಲ್ಲಿ ಪ್ರಕರಣ ಬೆಳಕಿಗೆ ಬಂದ ಬಳಿಕ ಸರ್ಕಾರ SIT ರಚಿಸಿದ್ದು, ಜೂನ್ 25ರಂದು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.



