ಬಾಗಲಕೋಟೆ : ಉಪಚುನಾವಣೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಗೆಲುವಿನ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಆಡಳಿತ ಪಕ್ಷ ಫಲಿತಾಂಶದ ಬಗ್ಗೆ ಆತಂಕದಲ್ಲಿದೆ ಎಂದು ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಮಾತುಗಳು ಬಿಜೆಪಿಯ ಭಯವನ್ನು ತೋರಿಸುತ್ತವೆ ಎಂದು ತಿರುಗೇಟು ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಮೃತ ಶಾಸಕರ ಕುಟುಂಬ ಸದಸ್ಯರನ್ನು ಕಣಕ್ಕಿಳಿಸುವುದು ಕಾಂಗ್ರೆಸ್ನ ಸಂಪ್ರದಾಯವಾಗಿದೆ. ಹೀಗಾಗಿ ಬಾಗಲಕೋಟೆ ಮತ್ತು ದಾವಣಗೆರೆಯಲ್ಲೂ ಇದೇ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಜನರಿಂದ ಅಪಾರ ಬೆಂಬಲ ದೊರೆಯುತ್ತಿದೆ ಎಂದು ಹೇಳಿದರು. ಬಳಿಕ ನಿಧನರಾದ ಹೆಚ್.ವೈ.ಮೇಟಿ ಅವರ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದ ಸಿಎಂ, ಅವರು ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು. ತಂದೆಯ ನಿಧನದಿಂದ ತೆರವಾದ ಸ್ಥಾನದಲ್ಲಿ ಸ್ಪರ್ಧಿಸುತ್ತಿರುವ ಉಮೇಶ್ ಮೇಟಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಕುರಿತು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಪೈಲ್ವಾನ್ ಸಾದಿಕ್ ಅವರನ್ನು ಸ್ಪರ್ಧೆಯಿಂದ ಹಿಂದೆ ಸರಿಯಲು ಮನವೊಲಿಸಲಾಗಿದೆ ಎಂದರಲ್ಲದೆ, ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬಳಿಕ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಸಿಎಂ ಸ್ಥಾನ ಕುರಿತ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರಗಳಿಗೆ ಬದ್ಧನಾಗಿದ್ದೇನೆ ಎಂದರು. ನಂತರ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಮುಖ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಆರೋಪಿಸಿದರು.
ವೈದ್ಯಕೀಯ ಕಾಲೇಜು ಸ್ಥಾಪನೆ ಹಾಗೂ ಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡುವ ವಿಷಯಗಳಿಗೆ ಆದ್ಯತೆ ನೀಡಲಾಗಿಲ್ಲ ಎಂದು ಹೇಳಿದರು.



