ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ ಸಿಎ) ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಕೆಎಸ್ಸಿಎ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣಕುಮಾರ್ ಅವರು ನಡೆಸಿದರು.
ಬಂಧನಭೀತಿ ಎದುರಿಸುತ್ತಿದ್ದ ಕೆ ಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್ , ಕಾರ್ಯದರ್ಶಿ ಎ. ಶಂಕರ್., ಖಜಾಂಚಿ ಇಎಸ್ ಜೈರಾಮ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಕೆ ಎಸ್ ಸಿ ಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಸೂಚಿಸಿದೆ. ಆದರೆ, ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ.
ರಾಜ್ಯ ಸರಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ವಾದಿಸಿ, ತನಿಖೆಯನ್ನು ಮುಂದುವರಿಸಲು ಬಿಡಬೇಕು ಮತ್ತು ಪೊಲೀಸರು ಸದ್ಯಕ್ಕೆ ಯಾರನ್ನೂ ಬಂಧಿಸುವುದಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ನ್ಯಾಯಾಲಯವು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಜೂನ್ 16 ಕ್ಕೆ ಮುಂದೂಡಿದೆ.
ಆರ್ ಸಿ ಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿ ಎನ್ ಎ ಮ್ಯಾನೇಜ್ ಮೆಂಟ್ ಅಧಿಕಾರಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು ಅವರನ್ನು ನ್ಯಾಯಾಂಗ ಬಂಧನಕ್ಕೆಒಪ್ಪಿಸಲಾಗಿದೆ.