ಬೆಂಗಳೂರು: 2025ರ ಐಪಿಎಲ್ ಚಾಂಪಿಯನ್ಶಿಪ್ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಹೊರಗಿನ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದು, ದುರಂತದಲ್ಲಿ ಗಾಯಗೊಂಡು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆಸ್ಪತ್ರೆ ವೆಚ್ಚವನ್ನು ರಾಜ್ಯ ಸರಕಾರದಿಂದಲೇ ಭರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಗುರುವಾರ ಈ ಸಂಬಂಧ ಟಿಪ್ಪಣಿ ಹೊರಡಿಸಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ‘ನಿನ್ನೆ ನಡೆದ ಆರ್ಸಿಬಿ ವಿಜಯೋತ್ಸವ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದ ದುರಂತದಲ್ಲಿ 11 ಜನ ಮೃತಪಟ್ಟಿದ್ದು ಹಾಗೂ ಸುಮಾರು ಜನ ಗಾಯಗೊಂಡಿದ್ದು ವಿವಿಧ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.
ಈ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದು, ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಭರಿಸುವಂತೆ ಸೂಚನೆ ನೀಡಿದ್ದಾರೆ. ಸಿಎಂ ಆದೇಶದಂತೆ ಗಾಯಾಳುಗಳಿಗೆ ಸೂಕ್ತವಾದ ವೈದ್ಯಕೀಯ ನೆರವನ್ನು ಆರೋಗ್ಯ ಇಲಾಖೆಯಿಂದ ಒದಗಿಸಲು ಕ್ರಮ ಕೈಗೊಳ್ಳುವುದು. ಮುಂದುವರೆದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಗತ್ಯ ಸಮನ್ವಯ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.