ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ಮಾರ್ ಗ್ರಾಮದ ಕೂರತ್ ಮಸೀದಿಯಲ್ಲಿ ಕೂರತ್ ತಂಙಳ್ರ ಹೆಸರಿನಲ್ಲಿ ನಡೆಯುತ್ತಿದ್ದ ಉರೂಸ್ ಕಾರ್ಯಕ್ರಮದ ಅಂತಿಮ ದಿನವಾದ ರವಿವಾರ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ಜನದಟ್ಟಣೆ ಉಂಟಾಗಿ ಆರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ.
ಈ ಕಾರ್ಯಕ್ರಮಕ್ಕೆ ಬೇರೆ ಬೇರೆ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ರು. ಜನದಟ್ಟಣೆಯಲ್ಲಿ 6 ಮಂದಿ ದೈಹಿಕವಾಗಿ ನಿತ್ರಾಣಗೊಂಡಿದ್ದು, ಇವ್ರನ್ನು ಸ್ಥಳದಲ್ಲಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಚರಿಸಿದ್ದು ಇಬ್ಬರ ಆರೋಗ್ಯ ಸ್ಥಳದಲ್ಲೇ ಸುಧಾರಿಸಿದೆ. ಉಳಿದ 4 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆ.
ಸದ್ಯ ಉರೂಸ್ ಕಾರ್ಯಕ್ರಮ ಮುಕ್ತಾಯಗೊಂಡಿದೆ. ಈ ಕುರಿತು ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳು ಹರಡದಂತೆ ಹಾಗೂ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದಾಗಿ ವಿನಂತಿ ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.