ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ, ರೈತರ ಹಿತಾಸಕ್ತಿ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ಜುಲೈ 15ರಂದು ಮಹತ್ವದ ಸಭೆ ನಡೆಯಲಿದ್ದು, ಅಂದೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಮತ್ತು ಶ್ರೀರಂಗಪಟ್ಟಣ ಭಾಗದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದ್ದು, ಸುಪ್ರೀಂ ಕೋರ್ಟ್ ಆದೇಶ ಪಾಲಿಸುವ ಜವಾಬ್ದಾರಿಯ ಜೊತೆಗೆ ರಾಜ್ಯದ ರೈತರ ಬೆಳೆ ಮತ್ತು ಕುಡಿಯುವ ನೀರಿನ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಜುಲೈ 15ರ ಸಭೆಯಲ್ಲಿ ರಾಜ್ಯದ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಹಾಗೂ ರೈಲ್ವೆ ಕಮಿಷನ್ ಮಾಜಿ ಅಧ್ಯಕ್ಷ ಎಚ್.ಹನುಮಂತಪ್ಪ ಅವರ ನಿಧನಕ್ಕೆ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದರು. ಚಿತ್ರದುರ್ಗದಲ್ಲಿ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳುವ ಮುನ್ನ ಮಾತನಾಡಿದ ಅವರು, ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಹನುಮಂತಪ್ಪ ಅವರೊಂದಿಗೆ ಒಡನಾಟ ಹೊಂದಿದ್ದೆ. ಪಕ್ಷ ಹಾಗೂ ರಾಜ್ಯಕ್ಕೆ ಮಾರ್ಗದರ್ಶನ ನೀಡುತ್ತಿದ್ದ ಹಿರಿಯ ನಾಯಕರನ್ನು ಕಳೆದುಕೊಂಡಿರುವುದು ತುಂಬಲಾರದ ನಷ್ಟ ಎಂದು ಹೇಳಿದರು.
ತಿರುಮಲ ದೇವಸ್ಥಾನದಲ್ಲಿ ಕರ್ನಾಟಕದ ಪರವಾಗಿ ನಡೆಯುವ ಮೊದಲ ಆರತಿ ಕುರಿತು ಪ್ರತಿಕ್ರಿಯಿಸಿದ ಸಿಎಂ, ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳಿಗೂ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು, ದೇವಸ್ಥಾನದ ಪ್ರೋಟೋಕಾಲ್ಗೆ ಧಕ್ಕೆಯಾಗದಂತೆ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಲ್ಲದೆ, ವಿಧಾನಸಭೆಯ ಮುಂಬರುವ ಅಧಿವೇಶನ ಹಾಗೂ ತಮ್ಮ ದೆಹಲಿ ಪ್ರವಾಸದ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದರು.



