ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಬೇಸಿಗೆ ಆರಂಭವಾಗುತ್ತಿದ್ದಂತೆ ಬಿಸಿಲ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಭೀಕರ ಬಿಸಿಲಿನಲ್ಲು ಆಂಜನಾದ್ರಿ ಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದಾರೆ.ಈ ತಾಪಮಾನ ಏರಿಕೆಯು ಭಕ್ತರ ಆರೊಗ್ಯದ ಮೇಲೆ ಭಾರಿಇ ಪರಿಣಾಮ ಬೀರುತ್ತಿದೆ ಹೀಗಾಗಿ ಭಕ್ತರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ಘೋಷಣೆ ಮಾಡಿದೆ.
ಇದಕ್ಕೆ ಸಂಬಂಧಿಸಿದಂತೆ ಇನ್ನು ಮುಂದೆ ಮಧ್ಯಾಹ್ನದ ಸಮಯದಲ್ಲಿ ಭಕ್ತರು ಅಂಜನಾದ್ರಿ ಬೆಟ್ಟ ಏರುವುದನ್ನು ನಿಷೇಧಿಸಲಾಗಿದ್ದು, ದರ್ಶನಕ್ಕೆ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಲಾಗಿದೆ.ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ.
ಈ ದೇವಸ್ಥಾನದ ದರ್ಶನ ಪಡೆಯಲು ಸುಮಾರು 575 ಮೆಟ್ಟಿಲುಗಳನ್ನು ಏರಬೇಕಾಗುತ್ತದೆ. ಆದರೆ, ಕಳೆದ ಕೆಲವು ತಿಂಗಳುಗಳಿಂದ ಉರಿಬಿಸಿಲಿನ ನಡುವೆ ಬೆಟ್ಟ ಏರುವಾಗ ಉಸಿರಾಟದ ತೊಂದರೆ ಮತ್ತು ಎದೆನೋವಿನಿಂದಾಗಿ ಇಬ್ಬರು ಭಕ್ತರು ಸಾವಿಗೀಡಗಿದ್ದರು. ಇಂತಹ ದುರ್ಘಟನೆಗಳು ಮರುಕಳಿಸಬಾರದು ಎಂಬ ಕಾರಣಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ದರ್ಶನದ ಸಮಯವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದ್ದಾರೆ.
ಹೊಸ ಆದೇಶದ ಪ್ರಕಾರ, ಭಕ್ತರು ಇನ್ನು ಮುಂದೆ ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರೆಗೆ ಮತ್ತು ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಮಾತ್ರ ದೇವರ ದರ್ಶನ ಪಡೆಯಲು ಅವಕಾಶವಿರುತ್ತದೆ. ಮಧ್ಯಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಟ್ಟದ ಮೆಟ್ಟಿಲುಗಳನ್ನು ಏರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬಿಸಿಲಿನ ತಾಮಾಮಾನದಿಂದ ಉಂಟಾಗುವ ನಿರ್ಜಲೀಕರಣ, ಉಸಿರಾಟದ ಸಮಸ್ಯೆ ಮತ್ತು ದೌರ್ಬಲ್ಯವನ್ನು ತಪ್ಪಿಸಲು ಈ ಕ್ರಮ ಅತ್ಯಗತ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಡಳಿತದ ಈ ನಿರ್ಧಾರವನ್ನು ಭಕ್ತರು ಸ್ವಾಗತಿಸಿದ್ದು, ಅದೇ ಸಮಯದಲ್ಲಿ, ಬೆಟ್ಟದ ಮೇಲೆ ತುರ್ತು ವೈದ್ಯಕೀಯ ಸೇವೆಗಳು ಮತ್ತು ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಮನವಿ ಮಾಡಿದ್ದಾರೆ. ಬಿಸಿಲಿನ ತಾಪಮಾನ ಕಡಿಮೆಯಾಗುವವರೆಗೆ ಈ ನಿಯಮಗಳು ಜಾರಿಯಲ್ಲಿರಲಿವೆ. ದೇವಸ್ಥಾನಕ್ಕೆ ಬರುವ ಭಕ್ತರು ಈ ಹೊಸ ಸಮಯದ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು, ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.



