ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಯಸ್ಸಾದ ಕಾರಣದಿಂದ ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂಬ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಂಡಿಸಿದ್ದಾರೆ.
ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕೂಡಲೇ ಅಸ್ಸಾಂ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿಕೆ ಶಿವಕುಮಾರ್, ಖರ್ಗೆಯವರು ದಶಕಗಳ ಕಾಲ ಜನರ ಜೀವನಕ್ಕಾಗಿ ಮುಡಿಪಾಗಿಟ್ಟ ಹಿರಿಯ ರಾಜಕಾರಣಿ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಅಧ್ಯಕ್ಷರಾಗಿ, ಅವರು ಮಹಾತ್ಮಾ ಗಾಂಧಿಯವರಿಂದ ಒಮ್ಮೆ ಹೊಂದಿದ್ದ ಶ್ರೇಷ್ಠ ಪರಂಪರೆ ಮತ್ತು ಜವಾಬ್ದಾರಿಯುತ ಸ್ಥಾನ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
ಅಂತಹ ಸ್ಥಾನಮಾನ ಹೊಂದಿರುವ ನಾಯಕನನ್ನು ಉದ್ದೇಶಿಸಿ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ. ನಮ್ಮ ದೇಶದಲ್ಲಿ ರಾಜಕೀಯ ಭಾಷಣದ ಘನತೆಯನ್ನು ಕಡಿಮೆ ಮಾಡುತ್ತದೆ ಎಂದಿದ್ದಾರೆ. ಮಲ್ಲಿಕಾರ್ಜನ ಖರ್ಗೆ ವಿರುದ್ಧದ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.



